ADVERTISEMENT

ದಾವಣಗೆರೆ ಅಭಿವೃದ್ಧಿಗೆ ಅವಿರತ ಶ್ರಮ

​ಪ್ರಜಾವಾಣಿ ವಾರ್ತೆ
Published 26 ಜನವರಿ 2012, 19:30 IST
Last Updated 26 ಜನವರಿ 2012, 19:30 IST

ದಾವಣಗೆರೆ: ಭವ್ಯ ಭಾರತ ನಿರ್ಮಾಣದ ಧ್ಯೇಯವಿಟ್ಟುಕೊಂಡು ಜಿಲ್ಲೆ ಹಾಗೂ ರಾಜ್ಯವನ್ನು ಅಭಿವೃದ್ಧಿಯತ್ತ ಮುನ್ನಡೆಸಲು ಅವಿರತ ಶ್ರಮಿಸಬೇಕು ಎಂದು ಸಚಿವ ಎಸ್.ಎ. ರವೀಂದ್ರನಾಥ್  ಕರೆ ನೀಡಿದರು.

ನಗರದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ 63ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಮಳೆ ನಿರೀಕ್ಷಿಸಿದಷ್ಟು ಬಂದಿಲ್ಲ. ಹಿಂಗಾರು ಬೆಳೆ ಪ್ರದೇಶದಲ್ಲಿ ಉತ್ತಮ ಮಳೆಯಾಗದೆ ಬಿತ್ತನೆ ಪ್ರಮಾಣವೂ ಕಡಿಮೆಯಾಗಿದೆ.ಹಿಂಗಾರು ಬಿತ್ತನೆ ಪ್ರದೇಶದಲ್ಲಿ ಶೇ. 63ರಷ್ಟು ಬಿತ್ತನೆಮಾತ್ರ  ಸಾಧ್ಯವಾಗಿದೆ. ಆದಾಗ್ಯೂ ಕೃಷಿ ಸೌಲಭ್ಯದ ಹಂಚಿಕೆ ವಿಚಾರದಲ್ಲಿ ಜಿಲ್ಲೆಯು ರಾಜ್ಯದಲ್ಲಿಯೇ ಎರಡನೇ ಸ್ಥಾನದಲ್ಲಿದೆ. ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ದಾವಣಗೆರೆ, ಜಗಳೂರು, ಹರಪನಹಳ್ಳಿ ತ್ಲ್ಲಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬರ ಪರಿಹಾರ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ 1 ಕೋಟಿ ಮೊತ್ತದಲ್ಲಿ ಕುಡಿಯುವ ನೀರು, ಮೇವು ಹಾಗೂ ಇತರ ಬರ ಪರಿಹಾರ ಕಾಮಗಾರಿಗಳಿಗಾಗಿ ವೆಚ್ಚ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಜಿಲ್ಲೆಯನ್ನು ಆಹಾರ ಭದ್ರತಾ ಕಾರ್ಯಕ್ರಮದ ಅಡಿ ಹಿಂದುಳಿದ ಜಿಲ್ಲೆ ಎಂದು ಗುರುತಿಸಲಾಗಿದೆ. ಆದರೆ, ಜಿಲ್ಲೆಯ ಜನರಿಗೆ ವಿಶೇಷ ಆಹಾರ ಭದ್ರತೆ ಒದಗಿಸಲು ಕ್ರಮ ವಹಿಸಲಾಗಿದೆ. ಫ್ಲೋರೈಡ್ ರಹಿತ ನೀರು ಒದಗಿಸುವ 11 ಯೋಜನೆಗಳು ಪೂರ್ಣಗೊಂಡಿವೆ. ಅಲ್ಲದೆ ನಗರ ಸೇರಿದಂತೆ ವಿವಿಧ ತಾಲ್ಲೂಕು ಕೇಂದ್ರಗಳಿಗೆ ಮಲಿನ ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲು ಅನುದಾನ ಮಂಜೂರಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ, ಜಿ.ಪಂ. ಅಧ್ಯಕ್ಷ ವೀರೇಶ್ ಹನಗವಾಡಿ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.