ADVERTISEMENT

ದಾವಣಗೆರೆ: ಕಂದಾಯ ನೌಕರರಿಂದ ರಕ್ತದಾನ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2012, 19:30 IST
Last Updated 4 ಆಗಸ್ಟ್ 2012, 19:30 IST

ದಾವಣಗೆರೆ: ಕಂದಾಯ ನೌಕರರ ಸಂಘದ ವತಿಯಿಂದ ನಗರದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣಶೆಟ್ಟಿ ಅವರು ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಗನ್ನಾಥ್ ಮಾತನಾಡಿ, ಇಲಾಖೆಯಲ್ಲಿ ಸಾಕಷ್ಟು ಕೆಲಸ ಇದ್ದರೂ ಅದರ ಮಧ್ಯೆ ರಕ್ತದಾನದಂಥ ರಚನಾತ್ಮಕ ಕೆಲಸದಲ್ಲಿ ಸಂಘ ತೊಡಗಿಕೊಂಡಿದೆ. ರಕ್ತದಾನ ಯಾರಿಗೂ ಸಹ ತುರ್ತು ಸಂದರ್ಭದಲ್ಲಿ ನೆರವಾಗಲಿದೆ. ಇನ್ನು ಮುಂದೆ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿಯೂ ಇಂಥ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಇದಕ್ಕೆ ಎಲ್ಲ ನೌಕರರ ಸಹಕಾರ ಅಗತ್ಯ ಎಂದು ಕೋರಿದರು.

ನಿವೃತ್ತ ಡಿವೈಎಸ್‌ಪಿ, ರೆಡ್‌ಕ್ರಾಸ್ ಗೌರವ ಕಾರ್ಯದರ್ಶಿ ಕೆ.ಪಿ. ಚಂದ್ರಪ್ಪ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯಲ್ಲಿ ಅತ್ಯಾಧುನಿಕ ರಕ್ತ ತಪಾಸಣೆ ಉಪಕರಣಗಳಿದ್ದು, ಎಲ್ಲ ಬಗೆಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಖಾಸಗಿ ಪ್ರಯೋಗಾಲಯಗಳ ಅರ್ಧಕ್ಕಿಂತಲೂ ಕಡಿಮೆ ದರದಲ್ಲಿ ರಕ್ತ ಪರೀಕ್ಷೆ ನಡೆಸಲಾಗುತ್ತದೆ. ಪ್ರತಿ ಯೂನಿಟ್ ರಕ್ತವನ್ನು ಕೂಡಾ ಕಡಿಮೆ ದರಕ್ಕೆ ನೀಡಲಾಗುತ್ತದೆ. ತುರ್ತು ಸಂದರ್ಭದಲ್ಲಿ ಪಡೆಯಬಹುದು. ಆದ್ದರಿಂದ  ಸಾರ್ವಜನಿಕರು ಕಡಿಮೆ ವೆಚ್ಚದಲ್ಲಿ ಲಭ್ಯವಿರುವ ಸೌಲಭ್ಯದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ತಹಶೀಲ್ದಾರ್ ಡಾ.ಬಿ.ಆರ್. ಹರೀಶ್ ಮಾತನಾಡಿ, ಕಂದಾಯ ನೌಕರರ ಸಂಘವು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಇಂಥ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿಯೂ ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಹಿನ್ನೆಲೆಯಲ್ಲಿ ದಾವಣಗೆರೆಯಿಂದಲೇ ಆರಂಭಿಸಲಾಗಿದೆ ಎಂದು ಹೇಳಿದರು.

ಉಪ ವಿಭಾಗಾಧಿಕಾರಿ ನಾಗರಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 41 ಯೂನಿಟ್ ರಕ್ತ ಸಂಗ್ರಹ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.