ADVERTISEMENT

ದಾವಣಗೆರೆ: ಹಿರಿಯ ನಾಗರಿಕರ ಕ್ರೀಡಾಕೂಟ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2011, 19:30 IST
Last Updated 1 ಅಕ್ಟೋಬರ್ 2011, 19:30 IST

ದಾವಣಗೆರೆ: `ಪಾಲಕರ, ಪೋಷಕರ ಮತ್ತು ಹಿರಿಯ ನಾಗರಿಕರ ಸಂರಕ್ಷಣಾ ಕಾಯ್ದೆ 2007~ರ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿಯನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಸ್.ಎಚ್. ವಿಜಯಕುಮಾರ್ ಹೇಳಿದರು.

ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜ್ಞಾನದೀಕ್ಷಾ ವಿದ್ಯಾಸಂಸ್ಥೆ, ಜಿಲ್ಲಾ ನಿವೃತ್ತ ನೌಕರರ ಸಂಘ, ಗುತ್ತೂರು ಕಾಲೊನಿಯ ಶಕ್ತಿ ಅಸೋಸಿಯೇಷನ್, ದೊಡ್ಡಬಾತಿಯ ಮೈತ್ರಿ ಅಸೋಸಿಯೇಷನ್, ಮಾಯಕೊಂಡದ ಗಾಯತ್ರಿ ಗ್ರಾಮೀಣ ವಿದ್ಯಾಸಂಸ್ಥೆ ಹಾಗೂ ಸ್ಥಳೀಯ ವರ್ಷಿಣಿ ವೃದ್ಧಾಶ್ರಮದ ಸಂಯುಕ್ತ ಆಶ್ರಯದಲ್ಲಿ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹಿರಿಯ ನಾಗರಿಕರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳು ಈ ಕಾಯ್ದೆಯಲ್ಲಿವೆ. ಈ ಹಿನ್ನೆಲೆಯಲ್ಲಿ, ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ನ್ಯಾಯಮಂಡಳಿಯೊಂದನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಹಿರಿಯ ನಾಗರಿಕರ ಕಲ್ಯಾಣ ಕಾರ್ಯಕ್ರಮಗಳ ಅವಲೋಕನ, ಸುಧಾರಣೆಗೆ ಸಲಹೆ, ವೃದ್ಧಾಶ್ರಮಗಳ ಸ್ಥಿತಿ-ಗತಿ ಪರಿಶೀಲನೆ ನಡೆಸಬಹುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ವಿ. ವಾಸುದೇವ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಜಿ.ಎಸ್. ಶಶಿಧರ್, ಹಿರಿಯ ನಾಗರಿಕರ ಸಂಘದ ಕಾರ್ಯದರ್ಶಿ ಗುರುಮೂರ್ತಿ, ಮೋತಿ ವೀರಪ್ಪ ಕಾಲೇಜು ಪ್ರಾಂಶುಪಾಲ ಚಂದ್ರಶೇಖರ್ ಹಾಜರಿದ್ದರು.
ಜ್ಞಾನದೀಕ್ಷಾ ವಿದ್ಯಾಸಂಸ್ಥೆ ಕಾರ್ಯದರ್ಶಿ ಪಿ. ರಾಜಕುಮಾರ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.