ADVERTISEMENT

ನೀರಿಗಾಗಿ ತಿರುಮಣಿ ಗ್ರಾಮಸ್ಥರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2012, 19:30 IST
Last Updated 17 ಏಪ್ರಿಲ್ 2012, 19:30 IST

ಗುಡಿಬಂಡೆ (ಚಿಕ್ಕಬಳ್ಳಾಪುರ): ನೀರಿನ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ತಾಲ್ಲೂಕಿನ ತಿರುಮಣಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಗ್ರಾಮಸ್ಥರು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಎದುರು ದೀರ್ಘ ಕಾಲದವರೆಗೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, `ನೀರಿನ ಸಮಸ್ಯೆ ಕೂಡಲೇ ಬಗೆಹರಿಸಬೇಕು. ಸಮಸ್ಯೆಯತ್ತ ನಿರ್ಲಕ್ಷ್ಯ ತೋರಿದಷ್ಟು ಇನ್ನಷ್ಟು ತೊಂದರೆಗೀಡಾಗಬೇಕಾಗುತ್ತದೆ. ನಮಗೆ ಕುಡಿಯಲು ನೀರು ನೀಡಿ~ ಎಂದು ಆಗ್ರಹ ಪಡಿಸಿದರು.

`ಹಲವು ತಿಂಗಳಿನಿಂದ ನೀರಿನ ಸಮಸ್ಯೆಯಿದೆ. ಆದರೆ ಇನ್ನೂವರೆಗೆ ಬಗೆಹರಿದಿಲ್ಲ. ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಹಲವು ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಆದರೂ ಸಹ ನಿರ್ಲಕ್ಷ್ಯ ತೋರುವುದು ಮುಂದುವರಿದಿದೆ. ಜನರು ಮತ್ತು ಜಾನುವಾರುಗಳಿಗೆ ನೀರಿಲ್ಲದೇ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಸಮಸ್ಯೆ ನಿವಾರಣೆಗೆ ತಾಲ್ಲೂಕು ಮತ್ತು ಜಿಲ್ಲಾಡಳಿತ ಅಗತ್ಯ ಕ್ರಮ ತೆಗೆದುಕೊಳ್ಳಬೇಕು~ ಎಂದು ಮುಖಂಡ ಸಿ.ಎಲ್.ಅಶ್ವತ್ಥಪ್ಪ ಒತ್ತಾಯಿಸಿದರು.

`ನೀರಿನ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸದಿದ್ದಲ್ಲಿ, ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸಲಾಗುವುದು. ಸಮಸ್ಯೆ ಬಗೆಹರಿಯುವವರಗೆ ಪ್ರತಿಭಟನೆ ಮುಂದುವರೆಸಲಾಗುವುದು~ ಎಂದು ಎಚ್ಚರಿಕೆ ನೀಡಿದರು. ಗ್ರಾಮಸ್ಥರಾದ ಹರೀಶ್, ವೆಂಕಟೇಶಪ್ಪ, ನಾರಾಯಣಸ್ವಾಮಿ, ಚನ್ನಕೃಷ್ಣಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.