ADVERTISEMENT

ಪಟ್ಟಾ ಜಮೀನು ಸಮೀಕ್ಷೆ ಸ್ಥಗಿತಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2011, 19:30 IST
Last Updated 6 ಏಪ್ರಿಲ್ 2011, 19:30 IST
ಪಟ್ಟಾ ಜಮೀನು ಸಮೀಕ್ಷೆ ಸ್ಥಗಿತಕ್ಕೆ ಆಗ್ರಹ
ಪಟ್ಟಾ ಜಮೀನು ಸಮೀಕ್ಷೆ ಸ್ಥಗಿತಕ್ಕೆ ಆಗ್ರಹ   

ರಾಯಚೂರು:  ತಾಲ್ಲೂಕಿನ ಯರಗೇರಾ ಗ್ರಾಮದಲ್ಲಿ ಹಲವಾರು ದಶಕಗಳಿಂದ ಸಾಗುವಳಿ ಮಾಡುತ್ತಿರುವ ಪಟ್ಟಾ ಜಮೀನುಗಳನ್ನು ಅರಣ್ಯ ಇಲಾಖೆ ಸಮೀಕ್ಷೆ ಮಾಡುತ್ತಿದ್ದು, ಕೂಡಲೇ ಈ ಕಾರ್ಯ ಸ್ಥಗಿತಗೊಳಿಸಲು ಆದೇಶಿಸಬೇಕು ಎಂದು ಯರಗೇರಾ ಹಾಗೂ ಸುತ್ತಮುತ್ತಲಿನ ನೂರಾರು ರೈತರು ಜೆಡಿಎಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಯರಗೇರಾ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ 126 ಬಡ ರೈತ ಕುಟುಂಬಗಳು ವರ್ಗದವರು ಶತಮಾನದಿಂದ ಯರಗೇರಾ ಸೀಮಾಂತರದ ಸರ್ವೆ 347,319, 233( ಸುಮಾರು 300 ಎಕರೆ) ಸಾಗುವಳಿ ಮಾಡಿಕೊಂಡು ಬಂದಿದ್ದಾರೆ ಎಂದು ಪ್ರತಿಭಟನಾಕಾರರು ವಿವರಿಸಿದರು.

ಕಳೆದ ಮಾರ್ಚ್ 15ರಂದು ಅರಣ್ಯ ಇಲಾಖೆಯವರು ಏಕಾಏಕಿ ಸರ್ವೆ ಕಾರ್ಯಕ್ಕೆ ಮುಂದಾಗಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮತ್ತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಈವರೆಗೂ ಸ್ಪಂದಿಸಿಲ್ಲ. ಹೀಗಾಗಿ ಅರಣ್ಯ ಇಲಾಖೆ ಸರ್ವೆ ಕಾರ್ಯ ಮುಂದುವರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಮೀನುಗಳನ್ನು ಯಾವುದೇ ಕಾರಣಕ್ಕೂ ರೈತರಿಂದ ಪಡೆಯಬಾರದು. ಸ್ಥಳಕ್ಕೆ ಜಿಲ್ಲಾಧಿಕಾರಿಗಳೇ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ರೈತರಿಗೆ ಆಗುವ ಅನ್ಯಾಯ ತಪ್ಪಿಸಬೇಕು. ಅರಣ್ಯ ಇಲಾಖೆ ನಡೆಸುತ್ತಿರುವ ಸಮೀಕ್ಷೆ ಕಾರ್ಯ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.ಜೆಡಿಎಸ್ ಜಿಲ್ಲಾಧ್ಯಕ್ಷ ಶೇಖ ರಿಜ್ವಾನ್, ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಮಹಮ್ಮದ್ ನಿಜಾಮುದ್ದೀನ್, ಜಿಲ್ಲಾ ವಕ್ತಾರ ಎಂ. ವಿರೂಪಾಕ್ಷಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್ ಶಿವಶಂಕರ ವಕೀಲ, ಸಣ್ಣ ವೀರಯ್ಯಶೆಟ್ಟ ದಳಪತಿ, ಎಂ ಕೃಷ್ಣಾಜಿರಾವ್ ಹಾಗೂ ಮತ್ತಿತರರು ಮನವಿ ಸಲ್ಲಿಸುವ ಸಂದರ್ಭದಲ್ಲಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.