ADVERTISEMENT

ಪರಿಶಿಷ್ಟ ಜಾತಿಗೆ ಬೆಸ್ತರು: ಸಂಸದ ಭರವಸೆ

​ಪ್ರಜಾವಾಣಿ ವಾರ್ತೆ
Published 22 ಜನವರಿ 2012, 19:30 IST
Last Updated 22 ಜನವರಿ 2012, 19:30 IST

ಶಿವಮೊಗ್ಗ: ಬೆಸ್ತರ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಕುರಿತು ಶೀಘ್ರದಲ್ಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಭರವಸೆ ನೀಡಿದರು.

ನಗರದಲ್ಲಿ ಭಾನುವಾರ ಜಿಲ್ಲಾ ಬೆಸ್ತರ ಸಂಘ ಹಾಗೂ ರಾಜ್ಯ ಗಂಗಾಮತಸ್ಥ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಗಂಗಾ ಪ್ರಸಾದನಿಲಯದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ತಮ್ಮ ಸಮುದಾಯವನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ನೀಡಿದ ಮನವಿಯನ್ನು ಸ್ವೀಕರಿಸಿದ ಅವರು, ಈ ಒಂದು ಬೇಡಿಕೆ ಮಾತ್ರವಲ್ಲದೆ ಬೆಸ್ತರ ಸಮುದಾಯದ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.

ದೇಶದಲ್ಲಿ ತಾಂಡವವಾಡುತ್ತಿರುವ ಹಸಿವನ್ನು ಓಡಿಸಲು ಶಿಕ್ಷಣದ ಆವಶ್ಯಕತೆ ಇದ್ದು, ಈ ಹಿನ್ನೆಲೆಯಲ್ಲಿ ಬೆಸ್ತರ ಸಂಘದ ವತಿಯಿಂದ ವಿದ್ಯಾರ್ಥಿನಿಲಯದ ಎರಡನೇ ಅಂತಸ್ಥಿತ ಕಟ್ಟಡ ನಿರ್ಮಾಣ ಕಾರ್ಯ ಕೈಗೊಂಡಿರುವುದು ಸಂತಸದ ವಿಷಯ. ಈ ಕಟ್ಟಡಕ್ಕೆ ಸಂಸದರ ನಿಧಿಯಿಂದ ಅಗತ್ಯ ಅನುದಾನ ನೀಡುವುದಾಗಿ ತಿಳಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹಿಂದುಳಿದ ಸಮಾಜದ ಅಭಿವೃದ್ಧಿಗೆ ಶಿಕ್ಷಣ ಅನಿವಾರ್ಯವಾಗಿದ್ದು, ಪ್ರತಿಯೊಬ್ಬರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮುಂದೆ ಬರಲು ಯತ್ನಿಸಬೇಕು ಎಂದರು.

ಸಭಾ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಉದ್ಘಾಟಿಸಿದರು. ರಾಜ್ಯಸಭಾ ಸದಸ್ಯ ಆಯನೂರು ಮಂಜುನಾಥ್, ಜಿಲ್ಲಾ ಬೆಸ್ತರ ಸಂಘದ ಅಧ್ಯಕ್ಷ ಡಿ.ಬಿ. ಕೆಂಚಪ್ಪ, ಶಾಸಕ ಎಚ್. ಹಾಲಪ್ಪ, ಗಂಗಾಮತಸ್ಥ ಸಮಾಜದ ಗೌರವಾಧ್ಯಕ್ಷ ತಿಮ್ಮಪ್ಪ, ಸುನೀತಾ ಅಣ್ಣಪ್ಪ, ಕೆ.ವಿ. ಸತೀಶ್‌ಗೌಡ, ಕೆ.ಆರ್. ಧರ್ಮಪ್ಪ, ಮಂಜಪ್ಪ, ಹೇಮಂತರಾಜು, ರೂಪ ಹೇಮಂತರಾಜು, ಎಸ್.ಬಿ. ಕೇಶವಪ್ಪ ಮತ್ತಿತರರು ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.