ADVERTISEMENT

ಪ್ರತಿಭಟನಾ ಮನೋಭಾವ ಬೆಳೆಸಿಕೊಳ್ಳಲು ಕರೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2011, 19:30 IST
Last Updated 7 ಫೆಬ್ರುವರಿ 2011, 19:30 IST


ಶಿವಮೊಗ್ಗ: ಮೋಸ, ವಂಚನೆ ಕಂಡಾಗ ಅದನ್ನು ಪ್ರತಿಭಟಿಸುವ ಹಾಗೂ ಅದರ ವಿರುದ್ಧ ಚಳವಳಿ ನಡೆಸುವ ಸಾಮರ್ಥ್ಯವನ್ನು ಜನಸಾಮಾನ್ಯರು ರೂಢಿ ಸಿಕೊಳ್ಳಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ತಿಳಿಸಿದರು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ವಾರ್ತಾ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಬಳಕೆದಾರರ ವೇದಿಕೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಇಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ದೇಶದಲ್ಲಿರುವ ಉತ್ತಮ ಮಾರುಕಟ್ಟೆ ವ್ಯವಸ್ಥೆಯ ಲಾಭ ಪಡೆಯಲು ವಿದೇಶಿಯರು ಮಾರುಕಟ್ಟೆ ಪ್ರವೇಶಿಸುತ್ತಿದ್ದಾರೆ. ಇದರಿಂದ ಆಕರ್ಷಕ ಜಾಹಿರಾತುಗಳಿಗೆ ಮಾರುಹೋಗದಂತೆ ಜಾಗೃತರಾಗಬೇಕೆಂದು ಕಿವಿಮಾತು ಹೇಳಿದರು.ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷ ಬಿ.ಎಸ್. ತೋಟದ ಮಾತನಾಡಿ, ಗ್ರಾಹಕರ ಹಿತ ಕಾಯುವ ದೃಷ್ಟಿಯಿಂದ ಹಲವಾರು ಪೂರಕ ಕಾನೂನುಗಳನ್ನು ಜಾರಿಗೆ ತರಲಾಗಿದೆ.ಇವುಗಳ ಸದುಪಯೋಗ ಪಡೆಯಬೇಕು ಎಂದರು.

ಜಿಲ್ಲಾ ಬಳಕೆದಾರರ ವೇದಿಕೆ ಅಧ್ಯಕ್ಷ ಗೋಪಾಲಕೃಷ್ಣ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಟಿ.ಆರ್. ಅಶ್ವತ್ಥ್‌ನಾರಾಯಣ ಶೆಟ್ಟಿ, ಬಳಕೆದಾರರ ವೇದಿಕೆ ನಿರ್ದೇಶಕ ರಮೇಶ್, ಆಹಾರ ನಿಗಮದ ವ್ಯವಸ್ಥಾಪಕ ರಾಮಚಂದ್ರಪ್ಪ ಮಾತನಾಡಿದರು.ಇದಕ್ಕೂ ಮುನ್ನ ವಾರ್ತಾ ಇಲಾಖೆಯಿಂದ ಮಾಹಿತಿ ಹಕ್ಕು ಕುರಿತ ಬೀದಿನಾಟಕ ಪ್ರದರ್ಶಿಸಲಾಯಿತು. ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ತೂಕ, ಅಳತೆ, ಪರಿಕರಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಗಿರಿಜಾ ಸತ್ಯನಾರಾಯಣ ಪ್ರಾರ್ಥಿಸಿದರು. ಆಹಾರ ಇಲಾಖೆ ಸಹಾಯಕ ನಿರ್ದೇಶಕ ಜಯಣ್ಣ ಸ್ವಾಗತಿಸಿದರು. ಸಹಾಯಕ ನಿರ್ದೇಶಕ ಮಂಜುನಾಥ್ ನಿರೂಪಿಸಿದರು. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ದೇವರಾಜಯ್ಯ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.