ಕೊಪ್ಪಳ: ಜಿಲ್ಲೆಯಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರಿಗೆ ಕೂಡಲೇ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೂಡಲೇ ಕೆಲಸ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಮೆರವಣಿಗೆ ನಡೆಸಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗೆ ಈ ಸಂಬಂಧ ಮನವಿ ಪತ್ರ ಸಲ್ಲಿಸಿದ ಪ್ರತಿಭಟನಾಕಾರರು, ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡುವ ಮೂಲಕ ಕೂಲಿ ಕಾರ್ಮಿಕರು ಗುಳೆ ಹೋಗುವುದನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದರು.
ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿ ನಿರ್ವಹಿಸಿದ ಕೂಲಿಕಾರ್ಮಿಕರಿಗೆ ವಾರಕ್ಕೊಮ್ಮೆ ಕೂಲಿ ಹಣವನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದೂ ಮನವಿ ಮಾಡಿದರು.ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಜಮೀನುಗಳ ಬೆಲೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಬಡವರು ನಿವೇಶನ ಖರೀದಿಸಿ ಮನೆ ಕಟ್ಟುವುದು ಅಸಾಧ್ಯ. ಅಲ್ಲದೆ, ಕುಟುಂಬಗಳಲ್ಲಿನ ಸದಸ್ಯರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಸತಿ ಸಮಸ್ಯೆ ತಲೆದೋರಿದೆ ಎಂದು ಅವರು ತಿಳಿಸಿದರು.
ಸಂಘದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ, ಜಿಲ್ಲಾ ಕಾರ್ಯದರ್ಶಿ ಜಿ.ನಾಗರಾಜ್, ನಿಂಗಪ್ಪ ಅಂಗೋಲಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.