ಧಾರವಾಡ: ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಬರ ಅಧ್ಯಯನದ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಇದೇ 23ರ ಒಳಗೆ ಸಲ್ಲಿಸಲಾಗುವುದು. ಬರ ಪರಿಹಾರ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಇಲ್ಲಿ ಹೇಳಿದರು.
ತಾಲ್ಲೂಕಿನ ನರೇಂದ್ರ, ಹೆಬ್ಬಳ್ಳಿ, ಅಮ್ಮಿನಭಾವಿ ಗ್ರಾಮಗಳಳಿಗೆ ಭೇಟಿ ನೀಡಿದ ಅವರು ಬರ ಪರಿಸ್ಥಿತಿ ಅಧ್ಯಯನ ನಡೆಸಿ, ರೈತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದರು.
`ಕಾಂಗ್ರೆಸ್ ಪಕ್ಷದ ನಾಯಕರು ಮೂರು ತಂಡಗಳಲ್ಲಿ ರಾಜ್ಯದ 123 ತಾಲ್ಲೂಕುಗಳಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಎರಡ್ಮೂರು ದಿನಗಳಲ್ಲಿ ಪ್ರವಾಸ ಮುಗಿಯಲಿದೆ. ನಂತರ ಸಮಗ್ರ ವರದಿಯನ್ನು ರಾಜ್ಯ ಹಾಗೂ ಕೇಂದ್ರಕ್ಕೆ ಸಲ್ಲಿಸಲಾಗುವುದು. ಮುಖ್ಯಮಂತ್ರಿಗಳು ಕರೆದಿರುವ ಸರ್ವ ಪಕ್ಷಗಳ ಮುಖಂಡರ ಸಭೆ ಇದೇ 19 ರಂದು ನಡೆಯಲಿದ್ದು ತಾವು ಭಾಗವಹಿಸುತ್ತೇನೆ~ ಎಂದರು.
ನೀರಿನ ಸಮಸ್ಯೆ ಗಂಭೀರವಿದ್ದು, ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಮೇವು ಇಲ್ಲದ ಕಾರಣ ರೈತರು ತಮ್ಮ ದನಕರುಗಳನ್ನು ಮಾರುವ ಸ್ಥಿತಿಗೆ ಬಂದಿದ್ದಾರೆ.
ಈ ಭಾಗದಲ್ಲಿ ಗೋ ಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಬೇಕು. ಉಚಿತವಾಗಿ ಮೇವು ಒದಗಿಸಬೇಕು ಎಂದು ಒತ್ತಾಯಿಸಿದರು.
ಬರ ಅಧ್ಯಯನ ತಂಡದ ಸದಸ್ಯರಾದ ಟಿ.ಬಿ. ಜಯಚಂದ್ರ, ಶಿವಮೂರ್ತಿ, ಶ್ರೀನಿವಾಸ ಮಾನೆ ಹಾಗೂ ಶಾಸಕ ವೀರಣ್ಣ ಮತ್ತಿಕಟ್ಟಿ, ಮಾಜಿ ಶಾಸಕ ವಿನಯ ಕುಲಕರ್ಣಿ, ಸಿ.ಎಸ್.ಶಿವಳ್ಳಿ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.