ADVERTISEMENT

ಬೆಳೆ ಸಾಲ ಮನ್ನಾಕ್ಕೆ ಜೋಡೆತ್ತಿನ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 14 ಮೇ 2012, 19:30 IST
Last Updated 14 ಮೇ 2012, 19:30 IST

ರಾಯಚೂರು: ರೈತರ ಬೆಳೆ ಸಾಲ ಮನ್ನಾ ಮಾಡಬೇಕು ಹಾಗೂ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಿಸಬೇಕು, ಶೇ 50ರಷ್ಟು ರಿಯಾಯ್ತಿ ದರದಲ್ಲಿ  ರಸಗೊಬ್ಬರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸೋಮವಾರ ಜೋಡೆತ್ತಿನ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಬೆಳಿಗ್ಗೆ ರಾಜೇಂದ್ರ ಗಂಜ್‌ನಿಂದ ಚಂದ್ರಮೌಳೇಶ್ವರ ವೃತ್ತ, ತೀನ್‌ಕಂದೀಲ್ ವೃತ್ತ, ಬಸ್ ನಿಲ್ದಾಣ ರಸ್ತೆ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿ ಡಾ.ಮನಮೋಹನ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ಆಂತರಿಕ ಕಚ್ಚಾಟದಿಂದ ಸರ್ಕಾರ ಸಂಪೂರ್ಣವಾಗಿ ಅತಂತ್ರ ಸ್ಥಿತಿಯಲ್ಲಿದೆ. ಕರ್ನಾಟಕದ14 ಜಿಲ್ಲೆಗಳ 123 ತಾಲ್ಲೂಕುಗಳಲ್ಲಿ ಭೀಕರ ಬರಗಾಲ ಇದೆ. ಆದರೆ, ಬರ ನಿರ್ವಹಣೆಯಲ್ಲಿ  ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲಗೊಂಡಿವೆ ಎಂದು ಅವರು ಆರೋಪಿಸಿದರು.

ಬರಗಾಲ ಹಾಗೂ ಅತಿವೃಷ್ಟಿಗೆ ತುತ್ತಾದ ರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಬೇಕು, ದೀರ್ಘಾವಧಿ ಸಾಲವನ್ನು ಕೂಡ ಮನ್ನಾ ಮಾಡಬೇಕು  ಎಂದು ಒತ್ತಾಯಿಸಿದರು.

ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿಪಾಟೀಲ, ಕಾರ್ಯದರ್ಶಿ ಅಮರಣ್ಣ ಗುಡಿಹಾಳ್, ಜಿಲ್ಲಾ ಗೌರವಾಧ್ಯಕ್ಷ ವಿಶ್ವಾನಾಥರೆಡ್ಡಿ ಜೀನೂರು, ಜಿಲ್ಲಾಧ್ಯಕ್ಷ ಎನ್.ಲಕ್ಷ್ಮಣಗೌಡ ಕಡಗಂದೊಡ್ಡಿ, ಜಿಲ್ಲಾ ಕಾರ್ಯಾಧ್ಯಕ್ಷ ಶೇಖರಗೌಡ,  ಜಿಲ್ಲಾ ಉಪಾಧ್ಯಕ್ಷರಾದ ದೊಡ್ಡ ಬಸನಗೌಡ ಬಲ್ಲಟಗಿ, ವಿ.ಭೀಮೇಶ್ವರರಾವ್, ಪ್ರಧಾನ ಕಾರ್ಯದರ್ಶಿ ಕೆ.ಹಂಪಣ್ಣ ಜಾನೇಕಲ್, ಜಗದೀಶ್ವರಯ್ಯ ಸ್ವಾಮಿ,ಸಂಗಣ್ಣ, ನರಸಿಂಗರಾವ್ ಕುಲಕರ್ಣಿ ಹಾಗೂ ಮತ್ತಿತರರು ಜೋಡೆತ್ತಿನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.