ADVERTISEMENT

ಭಾವೈಕ್ಯಕ್ಕೆ ಯುವಜನೋತ್ಸವ ಸಹಕಾರಿ

​ಪ್ರಜಾವಾಣಿ ವಾರ್ತೆ
Published 20 ಜನವರಿ 2011, 19:20 IST
Last Updated 20 ಜನವರಿ 2011, 19:20 IST

ಕುಶಾಲನಗರ: ‘ಯುವಜನೋತ್ಸವಗಳು ಯುವ ಸಮುದಾಯದಲ್ಲಿ ಶಾಂತಿ, ಸಹಬಾಳ್ವೆ, ಸೌಹಾರ್ದ ಬೆಳೆಸುವ ಮೂಲಕ ರಾಷ್ಟ್ರೀಯ ಭಾವೈಕ್ಯ ಮೂಡಿಸಲು ಸಹಕಾರಿ’ ಎಂದು ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಗುರುವಾರ ಹೇಳಿದರು.

ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಡಿ.ಎಡ್ ಶಿಕ್ಷಕರ ತರಬೇತಿ ಸಂಸ್ಥೆಗಳ ಪ್ರಶಿಕ್ಷಣಾರ್ಥಿಗಳಿಗೆ ಎರಡು ದಿನಗಳ ಕಾಲ ಏರ್ಪಡಿಸಿರುವ ಎನ್ನೆಸ್ಸೆಸ್ ಜಿಲ್ಲಾಮಟ್ಟದ ಯುವಜನೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಇಂತಹ ಉತ್ಸವಗಳು ಯುವಜನಾಂಗದಲ್ಲಿ ಉತ್ತಮ ವ್ಯಕ್ತಿತ್ವ, ನಾಯಕತ್ವ ಬೆಳೆಸುವ ಮೂಲಕ ಪರಸ್ಪರ ಸಾಂಸ್ಕೃತಿಕ ವಿನಿಮಯ ಮಾಡಿಕೊಳ್ಳಲು ಸೂಕ್ತ ವೇದಿಕೆ ಒದಗಿಸುತ್ತವೆ ಎಂದರು.

ಡಿಡಿಪಿಐ ಎನ್.ಎ.ರಾಮಸ್ವಾಮಿ, ವಿದ್ಯಾರ್ಥಿಗಳ ಸಾರ್ಥಕ ಸಾಧನೆಗೆ ಸತತ ಅಧ್ಯಯನ, ಕಠಿಣ ಪರಿಶ್ರಮ ಅಗತ್ಯ ಎಂದರು. ಡಯಟ್ ಪ್ರಾಂಶುಪಾಲ ಸಿ.ಜಿ.ಸಿದ್ದಲಿಂಗಸ್ವಾಮಿ, ಎನ್‌ಎಸ್‌ಎಸ್ ಅಧಿಕಾರಿ ಕೃಷ್ಣಪ್ಪ ಮಾತನಾಡಿದರು. ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷೆ ಹೇಮಾವತಿ ಅಧ್ಯಕ್ಷತೆ ವಹಿಸಿದ್ದರು.

ಮಡಿಕೇರಿ ಬಿಇಓ ಮರಿಸ್ವಾಮಿ, ಸಂಸ್ಥೆಯ ಹಿರಿಯ ಉಪನ್ಯಾಸಕ ಎಸ್.ಸುಂದರ್, ಮಡಿಕೇರಿ ಸರಸ್ವತಿ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಂಶುಪಾಲ ಕುಮಾರ್, ಶ್ರೀಮಂಗಲ ಜೇಸಿ ಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷ ಕೊಟ್ರಂಗಡ ಸುಬ್ರಮಣಿ, ಸದಾಶಿವ ಪಲ್ಲೇದ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.