ADVERTISEMENT

ಮಕ್ಕಳ ಪ್ರತಿಭೆ ವಿಕಸನಕ್ಕೆ ಆದ್ಯತೆ ನೀಡಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 16:55 IST
Last Updated 8 ಅಕ್ಟೋಬರ್ 2012, 16:55 IST

ಪುತ್ತೂರು: ಪ್ರತಿಯೊಂದು ಮಗುವಿನಲ್ಲಿ ವಿಭಿನ್ನ ರೀತಿಯ ಪ್ರತಿಭೆಯಿದ್ದು, ಅದನ್ನು ದಮನಿಸುವ ಬದಲು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು.

ನಗರದ ಡಾ.ಶಿವರಾಮ ಕಾರಂತ ಬಾಲವನದಲ್ಲಿ ರಾಜ್ಯ ಬಾಲಭವನ ಸೊಸೈಟಿ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ತಾಲ್ಲೂಕು ಬಾಲಭವನ ಸಮಿತಿ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ತಾಲ್ಲೂಕುಮಟ್ಟದ ಕಲಾಶ್ರೀ ಆಯ್ಕೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

`ಮಕ್ಕಳ ಪ್ರತಿಭಾ ವಿಕಸನಕ್ಕೆ ಆದ್ಯತೆ ನೀಡಬೇಕು. ಇದರಿಂದ ಅವರ ಜ್ಞಾನ ಭಂಡಾರ ಬೆಳೆಯಲು ಸಾಧ್ಯ~  ಎಂದ ಅವರು ಮಕ್ಕಳಿಗೆ ಸಣ್ಣ ವಯಸ್ಸಿನಲ್ಲೇ ವೇದಿಕೆ ಕಲ್ಪಿಸಿ ಭಯ ಮತ್ತು ಸಭಾಕಂಪನವನ್ನು ಹೋಗಲಾಡಿಸಬೇಕು ಎಂದರು.

ಪುರಸಭಾ ಅಧ್ಯಕ್ಷೆ ಕಮಲಾ ಅನಂದ್ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳಲ್ಲಿ ಅಡಗಿರುವ ಸುಪ್ತವಾದ ಕಲೆಯನ್ನು ಬೆಳಕಿಗೆ ತರುವಲ್ಲಿ, ಅವರ ಸರ್ವತೋಮುಖ ಅಭಿವೃದ್ಧಿಯಲ್ಲಿ ತಂದೆ-ತಾಯಿ ಪ್ರೋತ್ಸಾಹ ಅತೀ ಅಗತ್ಯ ಎಂದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಡಿ. ಶಂಭು ಭಟ್, ತಾಲ್ಲೂಕು ಪಂಚಾಯಿತಿ ಸದಸ್ಯೆ ನೇತ್ರಾವತಿ, ತಾಲ್ಲೂಕು ಬಾಲಭವನ ಸಮಿತಿ ಅಧ್ಯಕ್ಷೆ ಗೌರಿ ಬನ್ನೂರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಾನಂದ ಪೂಜಾರಿ, ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗ್ಡೆ, ಅಂಗನವಾಡಿ ಮೇಲ್ವಿಚಾರಕಿ ಜಲಜಾಕ್ಷಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.