ADVERTISEMENT

ಮಾಹಿತಿ ಹಕ್ಕು: ಅವಕಾಶಗಳ ಸದ್ಭಳಕೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2011, 18:30 IST
Last Updated 10 ಮಾರ್ಚ್ 2011, 18:30 IST

ಕೋಲಾರ: ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಲಭ್ಯವಾಗಿರುವ ಅವಕಾಶಗಳನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಾಹಿತಿ ಆಯೋಗದ ಆಯುಕ್ತ ಡಾ.ಎಚ್.ಎನ್.ಕೃಷ್ಣ ಸಲಹೆ ನೀಡಿದರು.ಮಾಹಿತಿ ಹಕ್ಕು ಕಾಯ್ದೆಯ ಪ್ರಯೋಜನಗಳನ್ನು ಕುರಿತ ‘ಅರಿವು’ ಪತ್ರಿಕೆಯ ಮೊದಲ ಸಂಚಿಕೆಯನ್ನು ನಗರದ ಟಿ.ಚೆನ್ನಯ್ಯ ರಂಗಮಂದಿರದಲ್ಲಿ ಗುರುವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸರ್ಕಾರಿ ನೌಕರರ ಕರ್ತವ್ಯ ವೈಖರಿ, ಯೋಜನೆಗಳ ಸಮರ್ಪಕ ಅನುಷ್ಠಾನದ ಸಲುವಾಗಿ ಮಾಹಿತಿ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಿದೆ. ತಮ್ಮ ಸಮಸ್ಯೆಗಳನ್ನು ಸುಲಭವಾಗಿ ಈಡೇರಿಸಿಕೊಳ್ಳಲು ಕೂಡ ಕಾಯ್ದೆಯನ್ನು ಬಳಸಬಹುದು. ಆ ಬಗ್ಗೆ ಅರಿವು ಪಡೆಯುವುದು ಮುಖ್ಯ ಎಂದು ಅಭಿಪ್ರಾಯಪಟ್ಟರು.

ವೆಬ್‌ಸೈಟ್ ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಮನೋಜ್‌ಕುಮಾರ್ ಮೀನಾ, ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡಿದ ಮಾತ್ರಕ್ಕೆ ಸಾರ್ವಜನಿಕರ ಸಹಭಾಗಿತ್ವ ಮುಗಿಯುವುದಿಲ್ಲ. ಮಾಹಿತಿಯನ್ನು ಸದ್ಬಳಕೆ ಮಾಡಿಕೊಂಡರೆ ಸರ್ಕಾರಿ ವ್ಯವಸ್ಥೆಯಲ್ಲಿ ಹಲವು ಸುಧಾರಣೆಗಳಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಪತ್ರಿಕೆಯ ಮುಖ್ಯ ಅಧಿಕಾರಿ ಪಿ.ಎಸ್.ರೆಡ್ಡಿ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಮಾಹಿತಿ ಹಕ್ಕು ಕಾಯ್ದೆ ಪ್ರಯೋಜನಗಳ ಕುರಿತು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.