ADVERTISEMENT

ಮುಂದುವರಿದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2011, 19:30 IST
Last Updated 23 ಮಾರ್ಚ್ 2011, 19:30 IST

ಚಿಕ್ಕಬಳ್ಳಾಪುರ: ಸರ್ಕಾರಿ ಸ್ವಾಮ್ಯದ ಜೀವವಿಮಾ ಸಂಸ್ಥೆ (ಎಲ್‌ಐಸಿ) ವತಿಯಿಂದ ನಿವೃತ್ತಿ ವೇತನ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಸಿಐಟಿಯು ಅಂಗನವಾಡಿ ನೌಕರರ ಸಂಘದ ಸದಸ್ಯರು ಕೈಗೊಂಡಿರುವ ಅನಿರ್ದಿಷ್ಟ ಅವಧಿಯ ಪ್ರತಿಭಟನೆ ಬುಧವಾರ ಮೂರನೇ ದಿನಕ್ಕೆ ಕಾಲಿರಿಸಿತು.ಪ್ರತಿಭಟನಾ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ಮಾತನಾಡಿ, ‘ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಂದಿಲ್ಲೊಂದು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಮಸ್ಯೆಗಳನ್ನು ಬಗೆಹರಿಸಬೇಕಾದ ಸರ್ಕಾರ ಅವರತ್ತ ನಿರ್ಲಕ್ಷ್ಯ ತೋರುತ್ತಿದೆ’ ಎಂದು ಆರೋಪಿಸಿದರು.
 

‘ಅಂಗನವಾಡಿ ನೌಕರರು ಎಲ್‌ಐಸಿ ಮೂಲಕ ನಿವೃತ್ತಿ ವೇತನ ಒದಗಿಸುವಂತೆ ಕೇಳುತ್ತಿದ್ದಾರೆ ಹೊರತು ಅಸಾಧ್ಯವಾದುದ್ದನ್ನು ಕೇಳುತ್ತಿಲ್ಲ. ಸರ್ಕಾರದ ಅಧೀನದಲ್ಲೇ ಇರುವ ಎಲ್‌ಐಸಿ ಸಂಸ್ಥೆಯ ಮೂಲಕ ನಿವೃತ್ತಿ ವೇತನ ನೀಡಲು ಸರ್ಕಾರಕ್ಕೇನು ಕಷ್ಟ ಎಂದು ಪ್ರಶ್ನಿಸಿದರು.ಅಂಗನವಾಡಿ ನೌಕರರ ಹೋರಾಟ ರಾಜ್ಯದಾದ್ಯಂತ ನಡೆಯುತ್ತಿದ್ದು, ಅವರ ಸಮಸ್ಯೆಗಳನ್ನು ಆಲಿಸಲು ಸರ್ಕಾರ ಮುಂದಾಗಬೇಕು. ಅತಿ ಕಡಿಮೆ ಗೌರವ ಧನದಲ್ಲಿ ಹೆಚ್ಚಿನ ಕೆಲಸ ಮಾಡುವ ಅಂಗನವಾಡಿ ನೌಕರರಿಗೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಲಕ್ಷ್ಮಿದೇವಮ್ಮ, ಸಿಐಟಿಯು ಮುಖಂಡ ಬಿ.ಎನ್.ಮುನಿಕೃಷ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT