ADVERTISEMENT

ಮೂವರಿಗೆ ಕೃಷಿ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2011, 19:30 IST
Last Updated 2 ಅಕ್ಟೋಬರ್ 2011, 19:30 IST

ಚಿತ್ರದುರ್ಗ: ಕೊಳವೆಬಾವಿ ಕೊರೆಸದಂತೆ ಕಾನೂನು ರೂಪಿಸುವ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತೋಟಗಾರಿಕೆ ಮತ್ತು ಸಕ್ಕರೆ ಸಚಿವ ಎಸ್.ಎ. ರವೀಂದ್ರನಾಥ್ ಹೇಳಿದರು.

ಶರಣ ಸಂಸ್ಕೃತಿ ಉತ್ಸವ ಅಂಗವಾಗಿ ಮುರುಘಾಮಠದ ವತಿಯಿಂದ ಭಾನುವಾರ ಮಠದ ಆವರಣದಲ್ಲಿ ನಡೆದ ಕೃಷಿಮೇಳ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ಈ ಬಗ್ಗೆ ಕಾನೂನು ರೂಪಿಸಲು ಎಲ್ಲರ ಸಹಕಾರ ಅಗತ್ಯವಿದೆ. ಆದರೆ, ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರೆ ಪ್ರತಿರೋಧ, ಪ್ರತಿಭಟನೆಗಳು ನಡೆಯುತ್ತವೆ. ಇಲ್ಲವೇ ನ್ಯಾಯಾಲಯಕ್ಕೆ ಹೋಗುತ್ತಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಉದಾಹರಣೆಗೆ ದಾವಣಗೆರೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಮುಂದಾದರೆ ತೇಜಸ್ವಿ ಪಟೇಲ್ ಹೋರಾಟಕ್ಕಿಳಿಯುತ್ತಾರೆ~ ಎಂದರು.

ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಮತ್ತು ಶೀತಲೀಕರಣ ಘಟಕಗಳನ್ನು ತೆರೆಯುವವರಿಗೆ ಸರ್ಕಾರಿಂದ ಶೇ. 40ರಷ್ಟು ಸಹಾಯಧನ ನೀಡಲಾಗುತ್ತಿದೆ. ಸರ್ಕಾರ ಕೃಷಿಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ರೈತರು ಎಲ್ಲ ವಿಷಯಗಳಿಗೂ ಸರ್ಕಾರವನ್ನು ಅವಲಂಬಿಸದೇ ಹಾಗೂ ಬೇರೆ ರೈತರನ್ನು ಅನುಕರಿಸದೇ ಸ್ವಂತ ನಿರ್ಧಾರ, ಸಲಹೆ-ಮಾರ್ಗದರ್ಶನದ ಮೂಲಕ ಅಗತ್ಯವಿರುವ ಬೆಳೆಗಳನ್ನು ಬೆಳೆದು, ಉತ್ತಮ ಬೆಲೆ ಬಂದಾಗ ಮಾರಾಟ ಮಾಡಬೇಕು ಎಂದು ಸಲಹೆ ನೀಡಿದರು.

ಕೇಂದ್ರದ ಮಾಜಿ ಸಚಿವ ಸಿದ್ದು ನ್ಯಾಮಗೌಡ, ಶಿವಮೂರ್ತಿ ಮುರುಘಾ ಶರಣರು ಮತ್ತಿತರು ಇದ್ದರು.
ಸಮಾರಂಭದಲ್ಲಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಸವರಾಜು ನಡಕಟ್ಟಿ, ತೇಜಸ್ವಿ ಪಟೇಲ್, ಪ್ರಗತಿಪರ ರೈತ ಬಸಪ್ಪರೆಡ್ಡಿ ಅವರಿಗೆ ಕೃಷಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.