ADVERTISEMENT

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ-ಸಂಯೋಜಿತ ಶಿಕ್ಷಣ ಅಗತ್ಯ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 19:30 IST
Last Updated 9 ಅಕ್ಟೋಬರ್ 2012, 19:30 IST

ಧಾರವಾಡ: `ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮತ್ತು ಸಂಯೋಜಿತ ಶಿಕ್ಷಣ ನೀಡುವಲ್ಲಿ ಕಾಲೇಜುಗಳು ಹಾಗೂ ವಿವಿಗಳು ಕಾರ್ಯ ನಿರ್ವಹಿಸಬೇಕಿದೆ~ ಎಂದು ಆಂಧ್ರಪ್ರದೇಶದ ಪ್ರಶಾಂತಿ ನಿಲಯಮ್‌ನ `ಸತ್ಯಸಾಯಿ ಇನ್‌ಸ್ಟಿಟ್ಯೂಟ್ ಆಫ್ ಹೈಯರ್ ಲರ್ನಿಂಗ್~ನ ಕುಲಪತಿ ಪ್ರೊ.ಜೆ.ಶಶಿಧರ ಪ್ರಸಾದ ಹೇಳಿದರು.

ನಗರದ ಸತ್ಯಸಾಯಿ ಮಹಿಳಾ ಗೃಹವಿಜ್ಞಾನ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳಾ ವಿ.ವಿ.ಯ ಅಂತರ್ ಮಹಾವಿದ್ಯಾಲಯ ಯುವಜನೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

`ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡುವಂತೆ ವಿವಿಗಳು ಕನಿಷ್ಠ ಶೇ 50 ರಷ್ಟು ಅಂಕಗಳನ್ನು ಪಠ್ಯೇತರ ಚಟುವಟಿಕೆಗಳಿಗೆ ಮೀಸಲಿಡಬೇಕು ಎಂದರು. 

 ಭಾಷೆಗಳನ್ನು ಬದುಕಿಸುವ ನಿಟ್ಟಿನಲ್ಲಿ ಯವಪೀಳಿಗೆ ಕಾರ್ಯ ಮಾಡಬೇಕಿದೆ. ವಿದ್ಯಾರ್ಥಿಗಳಲ್ಲಿರುವ ಕಲೆ ಹಾಗೂ ಕೌಶಲಗಳನ್ನು ಗುರುತಿಸುವ ನಿಟ್ಟಿನಲ್ಲಿ ಈ ಯುವಜನೋತ್ಸವ ಆಯೋಜಿಸಲಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿ.ವಿ ಕುಲಪತಿ ಡಾ.ಮೀನಾ ಚಂದಾವರಕರ ಹೇಳಿದರು.

ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಡಾ.ವಿನೋದಿನಿ ಮಹಿಷಿ, ಕಾಲೇಜಿನ ಪ್ರಾಚಾರ್ಯೆ ಡಾ.ರೇಣುಕಾ ಮೇಟಿ ಇತರರು ಭಾಗವಹಿಸಿದ್ದರು.

ನಂತರ ವಿವಿಧ ಮಹಿಳಾ ಕಾಲೇಜುಗಳಿಂದ ಬಂದಿದ್ದ ವಿದ್ಯಾರ್ಥಿನಿಯರು ಸುಮಾರು 24 ಬಗೆಯ ಸ್ಪರ್ಧೆಗಳಲ್ಲಿ ಭಾಗವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.