ಮಸ್ಕಿ: ರಾಜ್ಯದಲ್ಲಿನ ವಿದ್ಯುತ್ ಸೋರಿಕೆ ತಡೆಯಲು ಹಳೆಯ ಲೈನ್ ಹಾಗೂ ವಿದ್ಯುತ್ ಪರಿವರ್ತಕಗಳನ್ನು ಬದಲಾಯಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ರಾಜ್ಯದ ಇಂಧನ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ಇಲ್ಲಿ ತಿಳಿಸಿದರು.
110 ಕೆವಿ ವಿದ್ಯುತ್ ಉಪ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿನ ವಿದ್ಯುತ್ ಉತ್ಪಾದನೆ, ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿ ಹಾಗೂ ಹಳೆಯ ವಿದ್ಯುತ್ ಪರಿವರ್ತಕಗಳ ದುರಸ್ತಿಗಾಗಿ ಸರ್ಕಾರ ಇದುವರೆಗೆ 10,500 ಕೋಟಿ ರೂಪಾಯಿ ವೆಚ್ಚ ಮಾಡಿದೆ ಎಂದರು.
ರೈತರು ಅಕ್ರಮವಾಗಿ ವಿದ್ಯುತ್ ಪಡೆಯುವುದನ್ನು ನಿಲ್ಲಿಸಬೇಕು. ಅಕ್ರಮ ಪಂಪ್ಸೆಟ್ ಹೊಂದಿದವರು ಸಕ್ರಮ ಮಾಡಿಕೊಂಡರೆ ವಿದ್ಯುತ್ ಇಲಾಖೆಗೂ ಲಾಭ ರೈತರಿಗೂ ಲಾಭ ಎಂದರು. ರಾಯಚೂರು ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆಗೆ ಸಂಬಂಧಿಸಿ ಇದುವರೆಗೆ 150 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಮುಂಗಾರು ಮಳೆಯ ಕೊರತೆಯಿಂದ ಜಲಾಶಯಗಳು ಖಾಲಿಯಾಗಿ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ ಎಂದರು.
ಈ ಭಾಗದಲ್ಲಿ ಇನ್ನೂ ಹೆಚ್ಚಿನ ವಿದ್ಯುತ್ ಕೇಂದ್ರಗಳನ್ನು ಮಂಜೂರು ಮಾಡುವಂತೆ ಶಾಸಕ ಪ್ರತಾಪಗೌಡ ಪಾಟೀಲ ಒತ್ತಾಯಿಸಿದರು. ರಾಜ್ಯ ಹಿಂದುಳಿದ ಆಯೋಗದ ಅಧ್ಯಕ್ಷ ಎನ್. ಶಂಕ್ರಪ್ಪ, ತುಂಗಭದ್ರಾ ಕಾಡಾ ಅಧ್ಯಕ್ಷ ಬಸನಗೌಡ ಬ್ಯಾಗವಾಟ, ಖಾದಿ ಮಂಡಳಿ ಅಧ್ಯಕ್ಷ ಶಂಕರಗೌಡ ಹರವಿ, ಕೊಪ್ಪಳ ಸಂಸದ ಶಿವರಾಮಗೌಡ, ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್. ಬಿ. ಮುರಾರಿ, ತಾ.ಪಂ. ಅಧ್ಯಕ್ಷ ತಿಮ್ಮಣ್ಣ ನಾಯಕ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ದೇವಮ್ಮ ಸಾನಬಾಳ, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮನೋಜಜೈನ್, ಸಹಾಯಕ ಆಯುಕ್ತ ಯೋಗೇಶ, ಕೆಪಿಟಿಸಿಎಲ್ ಹಿರಿಯ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.