ಸಂಡೂರು: ರೈತರ ಹಾಗೂ ಸಾಮಾನ್ಯ ಜನರ ಬದುಕು ದುಃಸ್ಥಿತಿಗೆ ಬರಲು ವಿಶ್ವ ಬಂಡವಾಳ ಹೂಡಿಕೆಯೇ ಕಾರಣ ಎಂದು ರಾಜ್ಯ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ ಗೌಡ ಆರೋಪಿಸಿದರು.
ವಿಶ್ವ ಬಂಡವಾಳ ಹೂಡಿಕೆ ಸಮಾವೇಶ ವಿರೋಧಿಸಿ ಮತ್ತು ಇ್ಲ್ಲಲಿನ ರೈತರನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ಗುರುವಾರ ರೈತ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆರ್ಥಿಕ ಉದಾರೀಕರಣದ ನೀತಿಯಿಂದಾಗಿ ಬಂಡವಾಳ ಶಾಹಿಗಳು, ರಾಜಕಾರಣಿಗಳು ಉದ್ಧಾರರಾದರೇ ಹೊರತು ಜನರ ಜೀವನ ಮಟ್ಟದಲ್ಲಿ ಸುಧಾರಣೆ ಕಾಣಲಿಲ್ಲ. ಈಗ ರಾಜ್ಯ ಬಿಜೆಪಿ ಸರ್ಕಾರವು ವಿಶ್ವ ಬಂಡವಾಳ ಹೂಡಿಕೆ ಸಮಾವೇಶದ ಮೂಲಕ ಜನರಿಗೆ ಮೋಸ ಮಾಡುತ್ತಿದೆ ಎಂದರು.
ಹಲವಾರು ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಂಡೂರು, ಹೊಸಪೇಟೆ, ಕೂಡ್ಲಿಗಿ ತಾಲ್ಲೂಕುಗಳ ರೈತರ ಅರಣ್ಯ ಮತ್ತು ಕಂದಾಯ ಭೂಮಿಗಳನ್ನು ಅರಣ್ಯ ಇಲಾಖೆಯವರು ಒಕ್ಕಲೆಬ್ಬಿಸುತ್ತಿರುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿದರು.
ಬರಪೀಡಿತ ಪ್ರದೇಶವೆಂದು ಘೋಷಣೆಯಾಗಿರುವ ಜಿಲ್ಲೆಯ ರೈತರಿಗೆ ಯಾವುದೇ ಪರಿಹಾರ ಇದುವರೆಗೂ ಸಿಕ್ಕಿಲ್ಲ. ಕಾರಣ ರೈತರ ಎ್ಲ್ಲಲ ಸಾಲಗಳನ್ನು ಮನ್ನಾ ಮಾಡಬೇಕು, ಅನಾವೃಷ್ಟಿಯಿಂದ ಉಂಟಾಗಿರುವ ಬೆಳೆಹಾನಿಗೆ ಕೂಡಲೇ ಪರಿಹಾರ ನೀಡಬೇಕೆಂದು ಅವರು ಸರ್ಕಾರಕ್ಕೆ ಆಗ್ರಹಿಸಿದರು.
ತಾಲ್ಲೂಕು ರೈತ ಸಂಘದ ಅಧ್ಯಕ್ಷ ವಿ.ಜೆ.ಶ್ರೀಪಾದ, ಪ್ರಧಾನ ಕಾರ್ಯದರ್ಶಿ ಧರ್ಮ ನಾಯ್ಕ, ಬಿ.ರಸೂಲ್ ಸಾಬ್, ಇಮಾಮ್ ಸಾಬ್, ಸಿ.ಉಷಾ, ಗೌರಮ್ಮ, ಟಿ.ಕೆಂಚಪ್ಪ ಹಾಗೂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.