ADVERTISEMENT

ವಿಶ್ವ ಸಮಾಜವಾಗಿ ವೀರಶೈವ: ಶಾಮನೂರು ಆಶಯ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2012, 19:30 IST
Last Updated 21 ಅಕ್ಟೋಬರ್ 2012, 19:30 IST

ಶಿವಮೊಗ್ಗ: ವೀರಶೈವ ಸಮಾಜವನ್ನು ವಿಶ್ವ ಸಮಾಜವನ್ನಾಗಿ ಪರಿವರ್ತಿಸುವ ದೊಡ್ಡ ಹೊಣೆಗಾರಿಕೆ ಎಲ್ಲರ ಮೇಲಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಒಡೆದು ಹೋಗಿರುವ ವೀರಶೈವ ಸಮಾಜವನ್ನು ಒಟ್ಟು ಸೇರಿಸುವ ಕೆಲಸ ಈಗ ಆಗಬೇಕಾಗಿದೆ. ವೀರಶೈವರು ಒಳಪಂಗಡಗಳನ್ನು ಮರೆತು ವಿವಾಹ ಸಂಬಂಧಗಳನ್ನು ಮಾಡಿಕೊಳ್ಳುವ ವ್ಯವಸ್ಥೆ ಜಾರಿಗೆ ಬರಬೇಕು ಎಂದರು.
ಸಮುದಾಯದ ಕೆಎಎಸ್, ಐಎಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾಲೇಜು ಆರಂಭಿಸಲು ಯೋಜಿಸಲಾಗಿದೆ ಎಂದರು.

ಮಹಾಸಭಾದಲ್ಲಿ ಯಾವುದೇ ಪಕ್ಷಗಳನ್ನು ತರಲು ಹೋಗುವುದಿಲ್ಲ ಎಂದು ಭರವಸೆ ನೀಡಿದ ಅವರು, ಒಗ್ಗಟ್ಟಿನಿಂದ ಸಾಧನೆ ಮಾಡೋಣ ಎಂದರು.

ಕಾರ್ಯಕ್ರಮದಲ್ಲಿ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಎನ್. ತಿಪ್ಪಣ್ಣ, `ಕೈಗಾರಿಕಾ ರತ್ನ~ ಪ್ರಶಸ್ತಿ ಪುರಸ್ಕೃತ ಎಸ್. ರುದ್ರೇಗೌಡ ಅವರನ್ನು ಸನ್ಮಾನಿಸಲಾಯಿತು.

ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾ ಘಟಕವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಸಿರಿಗೆರೆ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ, ಬಸವ ಮರುಳಸಿದ್ಧ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಎನ್. ಸಜ್ಜನ್ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.