ADVERTISEMENT

ಶಿಕ್ಷಣ ಇಲಾಖೆ ಕಾರ್ಯವೈಖರಿಗೆ ಸಚಿವರ ಅತೃಪ್ತಿ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2011, 19:30 IST
Last Updated 5 ಏಪ್ರಿಲ್ 2011, 19:30 IST
ಶಿಕ್ಷಣ ಇಲಾಖೆ ಕಾರ್ಯವೈಖರಿಗೆ ಸಚಿವರ ಅತೃಪ್ತಿ
ಶಿಕ್ಷಣ ಇಲಾಖೆ ಕಾರ್ಯವೈಖರಿಗೆ ಸಚಿವರ ಅತೃಪ್ತಿ   

ಯಾದಗಿರಿ: ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೇ. 50 ರಷ್ಟೂ ಪ್ರಗತಿ ಸಾಧಿಸಿಲ್ಲ. ಹೀಗಾದರೆ ಮಕ್ಕಳಿಗೆ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಈ ವರ್ಷ ಮಾರ್ಚ್ ಮುಗಿದು ಏಪ್ರಿಲ್ ಆರಂಭವಾಗಿದ್ದರೂ, ಅನುದಾನದ ಬಗೆಗೆ ಮಾಹಿತಿ ಇಲ್ಲವೆಂದರೆ ಹೇಗೆ? ಸರ್ಕಾರ ಕೊಡುವ ಅನುದಾನದ  ಸಮರ್ಪಕ ಬಳಕೆ ಮಾಡದಿದ್ದರೆ, ಮಕ್ಕಳಿಗೆ ಶಿಕ್ಷಣ ದೊರೆಯುವುದಾದರೂ ಹೇಗೆ ಎಂದು ಕೇಳಿದರು.

ಶಿಕ್ಷಣ ಇಲಾಖೆಯ ಪ್ರಗತಿ ಬಗ್ಗೆ ಮಾಹಿತಿ ಪಡೆಯುವ ಸಂದರ್ಭದಲ್ಲಿ ಡಿಡಿಪಿಐ ಬಸಣ್ಣ ಮಹಾಂತಗೌಡ, ಅನುದಾನದ ಬಗ್ಗೆ ನಿಖರವಾದ ಮಾಹಿತಿ ಇಲ್ಲ ಎಂದು ಹೇಳಿದ್ದು ಸಚಿವರ ಆಕ್ರೋಶಕ್ಕೆ ಕಾರಣವಾಯಿತು.

ಜಿಲ್ಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ, ಸುವರ್ಣ ಗ್ರಾಮ ಯೋಜನೆಗಳ ಅನುದಾನ ಸಮರ್ಪಕವಾಗಿ ಬಳಕೆ ಆಗಿದೆ ಎಂದು ಜಿ.ಪಂ. ಉಪ ಕಾರ್ಯದರ್ಶಿ ಬಿ.ವಿ. ಭೋಸಲೆ ತಿಳಿಸಿದರು.  ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅನಸೂಯಾ ಬೋರಬಂಡ್, ಉಪಾಧ್ಯಕ್ಷ ನಾಗನಗೌಡ ಸುಬೇದಾರ, ಸಿಇಓ ಗುರನೀತ್ ತೇಜ್ ಮೆನನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.