ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರ ಬಜೆಟ್ನಲ್ಲಿ ಶೇ. 30ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು, ಸರ್ಕಾರಿ ಶಾಲಾ-ಕಾಲೇಜು, ವಸತಿ ನಿಲಯಗಳಿಗೆ ಮೂಲಸೌಕರ್ಯಗಳನ್ನು ಪೂರೈಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಒಕ್ಕೂಟದ (ಎಸ್ಎಫ್ಐ) ಸದಸ್ಯರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರವಾಸಿ ಮಂದಿರದಿಂದ ಉಪವಿಭಾಗಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ನಡೆಸಿ, ~ಸರ್ಕಾರ ಬೇಡಿಕೆಗಳಿಗೆ ಮಾನ್ಯತೆ ನೀಡಿ, ಶಿಕ್ಷಣದ ಪರ ನಿಲುವು ತೆಗೆದುಕೊಳ್ಳಬೇಕು. ಶಿಕ್ಷಣ ಕ್ಷೇತ್ರವನ್ನು ಬಲಪಡಿಸಬೇಕು. ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ತೋರಬಾರದು~ ಎಂದು ಹೇಳಿದರು.
ಎಸ್ಎಫ್ಐ ಜಿಲ್ಲಾ ಘಟಕದ ಉಪಾಧ್ಯಕ್ಷ ಮುನೀಂದ್ರ ಮಾತನಾಡಿ, ~ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ನಿಯಂತ್ರಿಸಲು ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸಬೇಕು. ನಿಯಮ ಬಾಹಿರವಾಗಿ ಡೊನೇಷನ್ ವಸೂಲಿ ಮಾಡುವ ಶಿಕ್ಷಣ ಸಂಸ್ಥೆಗಳ ಮಾನ್ಯತೆಯನ್ನು ರದ್ದುಗೊಳಿಸಬೇಕು~ ಎಂದು ಆಗ್ರಹಿಸಿದರು.
~ಅತಿಥಿ ಪ್ರಾಧ್ಯಾಪಕರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸುವ ಬದಲು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ವೇತನ ತಾರತಮ್ಯ ನಿವಾರಿಸಿ, ಸೇವಾ ಭದ್ರತೆ ಒದಗಿಸಬೇಕು. ಶಿಕ್ಷಣ ಕೋಮುವಾದೀಕರಣ ಬಿಟ್ಟು ವೈಜ್ಞಾನಿಕ, ಪ್ರಗತಿಪರ, ಉದ್ಯೋಗಾಧಾರಿತ ಶಿಕ್ಷಣ ಪದ್ಧತಿಯನ್ನು ಜಾರಿಗೊಳಿಸಬೇಕು. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಆಗುತ್ತಿರುವ ಲೈಂಗಿಕ ಕಿರುಕುಳ ತಡೆಗಟ್ಟಲು ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸಬೇಕು~ ಎಂದು ಒತ್ತಾಯಿಸಿದರು.
ಒಕ್ಕೂಟದ ಮುಖಂಡರಾದ ವೆಂಕಟೇಶ್, ನರಸಿಂಹಮೂರ್ತಿ, ಶ್ರೀಕಾಂತ್, ಬಾಬುರೆಡ್ಡಿ, ವೆಂಕಟೇಗೌಡ, ಮಧುಲತಾ, ನಾಗಿಣಿ, ನಂದಿನಿ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.