ADVERTISEMENT

ಶಿಲ್ಪಕಲಾ ಅಕಾಡೆಮಿಗೆ 1 ಕೋಟಿ ಅನುದಾನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2012, 19:30 IST
Last Updated 5 ಫೆಬ್ರುವರಿ 2012, 19:30 IST

ಉಡುಪಿ: ರಾಜ್ಯದಲ್ಲಿ ಶಿಲ್ಪಕಲೆ ಮತ್ತು ಗುರುಕುಲ ಸ್ಥಾಪನೆಗೆ ಹೆಚ್ಚಿನ ಒತ್ತು ನೀಡಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಈಗಾಗಲೇ ರೂ. 5 ಕೋಟಿ ಅನುದಾನ ನೀಡಿದೆ. ಆದರೆ ಈ ಅನುದಾನ ಸಮರ್ಪಕವಾಗಿ ತಲುಪಿಲ್ಲ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಶಿಲ್ಪಕಲಾ ಅಕಾಡೆಮಿಗೆ ತಕ್ಷಣ ಒಂದು ಕೋಟಿ ರೂಪಾಯಿ ಅನುದಾನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ತಿಳಿಸಿದರು.

ಇಲ್ಲಿನ ಕಲ್ಸಂಕದಲ್ಲಿ ಭಾನುವಾರ ವಿಶ್ವಕರ್ಮ ಒಕ್ಕೂಟದ ಬೆಳ್ಳಿಹಬ್ಬ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಶೇ 1ರ ಬಡ್ಡಿದರಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ವಿಶ್ವಕರ್ಮರಿಗೆ ಸಾಲ ನೀಡುವ ವ್ಯವಸ್ಥೆಯಾಗಬೇಕು, ಪ್ರತ್ಯೇಕ ನಿಗಮ ಮಂಡಳಿ ರಚಿಸಬೇಕು ಎಂಬಂತಹ ಬೇಡಿಕೆಗಳನ್ನು ಈಡೇರಿಸಲು ತಾವು ಪ್ರಯತ್ನಿಸುವುದಾಗಿ ತಿಳಿಸಿದರು.

ಸಾಹಿತಿಗಳಿಗೆ ಎಚ್ಚರಿಕೆ: ಸಮಾರೋಪ ಭಾಷಣ ಮಾಡಿದ ಹಾಸನದ ಅರೆಮಾದನಹಳ್ಳಿಯ ಪೀಠಾಧಿಪತಿ ಗುರುಶಿವ ಸುಜ್ಞಾನಮೂರ್ತಿ ಸ್ವಾಮೀಜಿ, ವಿಶ್ವಕರ್ಮ ಬ್ರಾಹ್ಮಣರ ಬ್ರಾಹ್ಮಣ್ಯದ ಬಗ್ಗೆ ಸೂಕ್ತ ಅಧ್ಯಯನ ನಡೆಸದೆ ಅವಹೇಳನಕಾರಿಯಾಗಿ ಬರೆಯುವುದು ಖಂಡನೀಯ ಎಂದರು.

ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಕಂಪೆನಿ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ವಿಶ್ವಕರ್ಮ ಸಮಾಜದ 50 ಸಾವಿರಕ್ಕೂ ಅಧಿಕ ಮಂದಿ ಸೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.