ADVERTISEMENT

ಶಿವಮೊಗ್ಗ: ಕುವೆಂಪು ವಿವಿ ಬಂದ್ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2011, 19:30 IST
Last Updated 23 ಮಾರ್ಚ್ 2011, 19:30 IST
ಶಿವಮೊಗ್ಗ: ಕುವೆಂಪು ವಿವಿ ಬಂದ್ ಯಶಸ್ವಿ
ಶಿವಮೊಗ್ಗ: ಕುವೆಂಪು ವಿವಿ ಬಂದ್ ಯಶಸ್ವಿ   

ಶಿವಮೊಗ್ಗ: ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಸಂದರ್ಭದಲ್ಲಿ ಶೇ. 80ರಷ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಎನ್‌ಎಸ್‌ಯುಐ ಬುಧವಾರ ಕರೆ ನೀಡಿದ್ದ ಕುವೆಂಪು ವಿಶ್ವವಿದ್ಯಾಲಯದ ಬಂದ್ ಸಂಪೂರ್ಣ ಯಶಸ್ವಿಯಾಯಿತು.

ಎನ್‌ಎಸ್‌ಯುಐ ಕಾರ್ಯಕರ್ತರು ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಿಗೆ ತೆರಳಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿ, ನಂತರ ತರಗತಿಗಳನ್ನು ನಡೆಸದಂತೆ ಪ್ರಾಧ್ಯಾಪಕರಿಗೆ ಮನವಿ ಮಾಡಿದರು.ತದನಂತರ ವಿದ್ಯಾರ್ಥಿಗಳು ವಿವಿ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ, ವಿವಿ ಮುಂಭಾಗದ ಗೇಟ್‌ನಲ್ಲಿ ಕೆಲಕಾಲ ಧರಣಿ ನಡೆಸಿ, ಕುಲಪತಿ ಪ್ರೊ.ಎಸ್.ಎ. ಬಾರಿ ಅವರಿಗೆ ಮನವಿ ಮಾಡಿದರು.

ಸಾಕಷ್ಟು ಯುವಕರು ಸ್ನಾತಕೋತ್ತರ ಪದವಿ ಮುಗಿಸಿ, ಕೆಲಸ ಸಿಗದೆ ನಿರುದ್ಯೋಗಿಗಳಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಿಗೆ ಉಪನ್ಯಾಸಕರ ಹುದ್ದೆಗೆ ನೇಮಕ ಮಾಡಿಕೊಳ್ಳುವಾಗ ಶೇ. 50ರಷ್ಟು ಸೀಟುಗಳನ್ನು ಪ್ರೌಢಶಾಲಾ ಶಿಕ್ಷಕರಿಗೆ ಮುಂಬಡ್ತಿ ನೀಡಿ ತುಂಬಿಸಿಕೊಳ್ಳಲು ಸರ್ಕಾರ ಹೊರಟಿದೆ. ಇದು ಅವೈಜ್ಞಾನಿಕವಾಗಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್. ಆಚಾರ್ಯರಿಗೆ ಮನವಿ ಸಲ್ಲಿಸಿದಾಗ ಹಾರಿಕೆ ಉತ್ತರ ನೀಡಿದ್ದಾರೆ. ಸಚಿವರು ಈ ತಪ್ಪನ್ನು ತಿದ್ದಿಕೊಳ್ಳಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ ಪಾಲ್ಗೊಂಡಿದ್ದರು. ಶಿವಮೊಗ್ಗ-ಚಿಕ್ಕಮಗಳೂರು ಎನ್‌ಎಸ್‌ಯುಐ ಅಧ್ಯಕ್ಷ ಮಧುಸೂದನ್, ಮಾಜಿ ಅಧ್ಯಕ್ಷ ಕೆ. ದೇವೇಂದ್ರಪ್ಪ, ಮುರುಗೇಶ್, ಚೇತನ್, ಮೋಹನ್ ನೇತೃತ್ವ ವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.