ADVERTISEMENT

ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2011, 19:30 IST
Last Updated 22 ಜನವರಿ 2011, 19:30 IST

ದೇವನಹಳ್ಳಿ : ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು ಪಠ್ಯ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ಕ್ರಿಯಾಶೀಲರಾಗಿ ಭಾಗವಹಿಸಿ ಎಂದು ಜಿಲ್ಲಾ ಶಿಕ್ಷಕರ ತರಬೇತಿ ಕೇಂದ್ರದ ಹಿರಿಯ ಉಪನ್ಯಾಸಕಿ ಕೆ. ನಾಗರತ್ನಮ್ಮ ತಿಳಿಸಿದರು. ಇಲ್ಲಿನ ಗ್ರಾಮಾಂತರ ಶಿಕ್ಷಣ ತರಬೇತಿ ಕಾಲೇಜು ಆವರಣದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿದರು.

ಪ್ರಶಿಕ್ಷಣಾರ್ಥಿಗಳು ಶಿಕ್ಷಣ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಭವಿಷ್ಯದಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಸಲಹೆ ನೀಡಿದರು. ತಾಲ್ಲೂಕು ಸೇವಾದಳ ಕಾರ್ಯದರ್ಶಿ ಎ.ಶಿವರಾಮಯ್ಯ ಮಾತನಾಡಿ, ಪ್ರಶಿಕ್ಷಣಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಕರಾಗಿ ಕೆಲಸ ನಿರ್ವಹಿಸಲು ಮುಂದಾಗಬೇಕು ಎಂದರು.

ಕಿಮ್ಸ್ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಉತ್ತಮ ಸಮಾಜ ರೂಪಿಸಲು ಶಿಕ್ಷಕರಿಂದ ಮಾತ್ರ ಸಾಧ್ಯ. ವಿದ್ಯಾರ್ಥಿಗಳ ಸಂಪೂರ್ಣ ಹೊಣೆ ನಿಮ್ಮ ಮೇಲಿದ್ದು, ಅವರನ್ನು ಉನ್ನತ ಮಾರ್ಗಕ್ಕೆ ಕೊಂಡೊಯ್ಯುವ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಡಯಟ್ ದೈಹಿಕ ಶಿಕ್ಷಣಾಧಿಕಾರಿ ರೇವಣ್ಣ ಮಾತನಾಡಿ, ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾಗಿರುವ ಪ್ರಶಿಕ್ಷಣಾರ್ಥಿಗಳು ವಿಭಾಗ ಮಟ್ಟದಲ್ಲಿ ನಡೆಯುವ ಸ್ಪರ್ಧೆಗಳಿಗೆ ವ್ಯವಸ್ಥಿತವಾಗಿ ಪೂರ್ವ ತರಬೇತಿ ಮಾಡಿಕೊಳ್ಳುವುದು ಅವಶ್ಯಕವೆಂದರು.

ಗ್ರಾಮಾಂತರ ಶಿಕ್ಷಕರ ತರಬೇತಿ ಸಂಸ್ಥೆ ಪಾಂಶುಪಾಲ ಬಿ.ಎನ್.ಕೃಷ್ಣಪ್ಪ ಅಧ್ಯಕ್ಷತೆವಹಿಸಿದ್ದರು. ಕೃಷ್ಣ ಡಿ.ಇಡಿ.ಕಾಲೇಜು ಪ್ರಾಂಶುಪಾಲ ದೇಸಾಯಿ, ನಂದಿನಿ ಕಾಲೇಜು ಪ್ರಾಂಶುಪಾಲ ಸಿದ್ಧರಾಜು, ಪ್ರಗತಿ ಕಾಲೇಜು ಪ್ರಾಂಶುಪಾಲ ದೇವರಾಜು, ನಂದಿ ಡಿ.ಇಡಿ.ಕಾಲೇಜ್ ಉಪನ್ಯಾಸಕ ಕೃಷ್ಣಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.