ಚಳ್ಳಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನತೆಯನ್ನು ಪ್ರತಿಯೊಬ್ಬ ವ್ಯಕ್ತಿಯೂ ಎತ್ತಿ ಹಿಡಿಯುವ ಮೂಲಕ ಸಂವಿಧಾನದ ಆಶಯವನ್ನು ಈಡೇರಿಸಬೇಕಾಗಿದೆ ಎಂದು ಬೆಂಗಳೂರಿನ ಸಮಾಜವಾದ ಸಮಾನತೆ ಅಧ್ಯಯನ ಕೇಂದ್ರದ ಸಂಚಾಲಕ ಪ್ರೊ. ಬಾಪು ಹೆದ್ದೂರ್ ಶೆಟ್ಟಿ ಅಭಿಪ್ರಾಯಪಟ್ಟರು.ಚಳ್ಳಕೆರೆ ಪಟ್ಟಣದ ಎಚ್ಪಿಪಿಸಿ ಕಾಲೇಜಿನ ಸಮಾಜಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬುಧವಾರ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿ ಹೆಚ್ಚುತ್ತಿರುವ ಬಂಡವಾಳಶಾಹಿಗಳ ಮಧ್ಯೆ ಸಮಾನತೆ ಮರೀಚಿಕೆಯಾಗುತ್ತಿದೆ. ಇದರಿಂದ ತಳ ಸಮುದಾಯಗಳ ಬದುಕು ಸಮಾನತೆಯಿಂದ ದೂರ ಉಳಿಯಲು ಕಾರಣವಾಗಿದೆ ಎಂದರು.ಪ್ರಸ್ತುತ ದಿನಮಾನದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಯುವಪೀಳಿಗೆ ಸಮಾನತೆಯ ಸಾಧನೆಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಮುಂದೆ ಬರಬೇಕಾಗಿದೆ ಎಂದರು.
ಪ್ರಾಧ್ಯಾಪಕ ಪ್ರೊ. ಅಜ್ಜಯ್ಯ ಮಾತನಾಡಿ, ಸಮಾಜದಲ್ಲಿ ಪ್ರತಿದಿನವೂ ಒಂದೊಂದು ರೀತಿ ಶೋಷಣೆ ಆಗುತ್ತಿದೆ. ಶೋಷಣೆಮುಕ್ತ ಸಮಾಜವನ್ನು ಕಟ್ಟಲು ಯತ್ನಿಸಿದ ದಾರ್ಶನಿಕರ ತತ್ವಗಳನ್ನು ಪಾಲಿಸುವ ಮೂಲಕ ಸಮಾನತೆಯ ಆಶಯವನ್ನು ಎತ್ತಿಹಿಡಿಯಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.