ADVERTISEMENT

ಸರ್ಕಾರಗಳ ವಿರುದ್ಧ ಸಿಪಿಎಂ ಜಾಥಾ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2011, 19:30 IST
Last Updated 6 ಏಪ್ರಿಲ್ 2011, 19:30 IST
ಸರ್ಕಾರಗಳ ವಿರುದ್ಧ ಸಿಪಿಎಂ ಜಾಥಾ
ಸರ್ಕಾರಗಳ ವಿರುದ್ಧ ಸಿಪಿಎಂ ಜಾಥಾ   

ಚಿಕ್ಕಬಳ್ಳಾಪುರ:  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಸಿಪಿಎಂ ಮತ್ತು ಸಾಮೂಹಿಕ ಸಂಘಟನೆಗಳು ಕೈಗೊಂಡಿರುವ ಜಿಲ್ಲಾ ಮಟ್ಟದ ಹತ್ತು ದಿನಗಳ ಬೃಹತ್ ಜಾಥಾಗೆ ಬುಧವಾರ ಚಾಲನೆ ನೀಡಲಾಯಿತು.

ಜಾಥಾದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಸಿಪಿಎಂ ಕಾರ್ಯಕರ್ತರು ಮತ್ತು ಸಾಮೂಹಿಕ ಸಂಘಟನೆಗಳ ಸದಸ್ಯರು ಪಾಲ್ಗೊಂಡಿದ್ದು, ಜಿಲ್ಲೆಯ ಪ್ರತಿಯೊಂದು ಹೋಬಳಿ ಮತ್ತು ಗ್ರಾಮಗಳಿಗೂ ಭೇಟಿ ನೀಡುವ ಉದ್ದೇಶ ಹೊಂದಿದ್ದಾರೆ.

ಜಾಥಾಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ, ‘ಜಾಥಾ ಸಂದರ್ಭದಲ್ಲಿ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ಜನವಿರೋಧಿ ನೀತಿ ಮತ್ತು ಭ್ರಷ್ಟಾಚಾರ ಆರೋಪಗಳನ್ನು ಬಯಲುಗೊಳಿಸಲಾಗುವುದು. ಅನ್ಯಾಯ, ಅಕ್ರಮದ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು’ ಎಂದರು.

ಜಾಥಾವನ್ನು ನಾಲ್ಕು ತಂಡಗಳಲ್ಲಿ ವಿಂಗಡಿಸಲಾಗಿದ್ದು, ಒಂದೊಂದು ತಂಡಕ್ಕೆ ಆಯಾ ತಾಲ್ಲೂಕುಗಳ ಜವಾಬ್ದಾರಿ ವಹಿಸಲಾಗಿದೆ. ಎರಡು ತಂಡಗಳು ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮತ್ತು ಚಿಂತಾಮಣಿ ತಾಲ್ಲೂಕುಗಳಲ್ಲಿ ಜಾಥಾ ಮುಂದುವರೆಸಿದರೆ, ಇನ್ನೂ ಎರಡು ತಂಡಗಳು ಗೌರಿಬಿದನೂರು, ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲ್ಲೂಕುಗಳಲ್ಲಿ ಜಾಥಾ ನಡೆಸಲಿವೆ. ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಕ್ರಾಂತಿಗೀತೆಗಳನ್ನು ಹಾಡಲಾಯಿತು. ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ವಿವಿಧ ಸಂಘಟನೆಗಳ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.