ಬಳ್ಳಾರಿ: ರಾಜ್ಯದ ಬಿ.ಜೆ.ಪಿ. ಸರ್ಕಾರವು ಕಾನೂನು ಪಾಲಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕವು ಭಾನುವಾರ ಇಲ್ಲಿ ಪ್ರತಿಭಟನೆ ನಡೆಸಿತು.ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ದಿವಾಕರ ಬಾಬು ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ದುರ್ಗಮ್ಮ ದೇವಸ್ಥಾನ ರಾಯಲ್ ವೃತ್ತದ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಗರ ತಹಸೀಲ್ದಾರ ಫಾಲಾಕ್ಷಗೌಡ ಪಾಟೀಲ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಅರ್ಪಿಸಿದರು.
ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷವು ಅನೇಕ ಹಗರಣ ಮತ್ತು ಭ್ರಷ್ಟಚಾರದಲ್ಲಿ ತೊಡಗಿ ಜನರ ಆಶೋತ್ತರಗಳಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದೆ ಎಂದು ಎಂ.ದಿವಾಕರಬಾಬು ಆರೋಪಿಸಿದರು.
ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಭ್ರಷ್ಟಚಾರ ಹಗರಣದ ಆರೋಪ ಮನಗಂಡು ಇಬ್ಬರು ವಕೀಲರು ಸಲ್ಲಿಸಿದ ಮನವಿ ಮೇರೆಗೆ ರಾಜ್ಯಪಾಲರು ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಅನುಮತಿ ನೀಡಿರುವುದು ಕಾನೂನು ಬದ್ಧವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯಪಾಲರ ವಿರುದ್ಧವೇ ಕರ್ನಾಟಕ ಬಂದ್ಗೆ ಕರೆ ನೀಡಿ, ಬಿಜೆಪಿ ಪಕ್ಷ ಕಾನೂನು ಪಾಲಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಆದರಿಂದ ರಾಜ್ಯಪಾಲರು ಕೂಡಲೇ ಇಂಥ ಭ್ರಷ್ಟ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದರು.
ಕಾಂಗ್ರೆಸ್ ಮುಖಂಡರಾದ ಕೆ.ಗೂಳಪ್ಪ, ವಿ.ಕೆ.ಬಸಪ್ಪ, ಅರ್ಜುನ್, ಆರ್.ಪ್ರಭಾಕರ್, ಗೋಪಿ, ಗೆಣಕೆಹಾಳು ಶಾಂತನಗೌಡ ಸೇರಿದಂತೆ ನೂರಾರು ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.