ADVERTISEMENT

ಸಾಹಿತ್ಯದಲ್ಲಿ ಕಲಬೆರಕೆ: ಕೂಡಿಗೆ ವಿಷಾದ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2011, 16:50 IST
Last Updated 26 ಫೆಬ್ರುವರಿ 2011, 16:50 IST

ಶಿವಮೊಗ್ಗ: ಸಾಹಿತ್ಯ, ಸಂಶೋಧನೆಯಲ್ಲಿ ಕಲಬೆರಕೆಯಾಗಿದ್ದು, ಜಾನಪದವೂ ಇದಕ್ಕೆ ಹೊರತಾಗಿಲ್ಲ ಎಂದು ಕುವೆಂಪು ವಿವಿಯ ನಿವೃತ್ತ ಪ್ರಾಧ್ಯಾಪಕ ಡಾ.ಶ್ರೀಕಂಠ ಕೂಡಿಗೆ ಅಭಿಪ್ರಾಯಪಟ್ಟರು. ನಗರದ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಹಿತಿ ಪ್ರೊ. ಸುಧಾಕರ್ ಸಾಹಿತ್ಯ ಕುರಿತು ವಿಚಾರ ಸಂಕಿರಣ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಪ್ರಾಂಜಲ ಮನಸ್ಸಿನಿಂದ ನೋಡಿದರೆ ಕಲಬೆರಕೆ ದಟ್ಟವಾಗಿ ಬೆಳೆಯುತ್ತಿರುವುದು ಕಂಡುಬರುತ್ತದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಸಾಹಿತಿ ಡಾ.ಕಾಳೇಗೌಡ ನಾಗವಾರ ಮಾತನಾಡಿ, ನಾಡಿಗೆ ಸದಭಿರುಚಿಯ ಶ್ರೀಮಂತಿಕೆಯ ಅನುಭವವನ್ನು ನೀಡಿದ ಸಾಹಿತಿ ಪ್ರೊ.ಸುಧಾಕರ್ ಅವರ ಕತೆ, ಸಾಹಿತ್ಯದ ಬಗ್ಗೆ ಸಂಶೋಧನೆ ನಡೆಯಬೇಕು ಎಂದು ತಿಳಿಸಿದರು. ಜಾನಪದ, ಕತೆ ಸೇರಿದಂತೆ ಹತ್ತು ಹಲವು ಕ್ಷೇತ್ರಗಳಲ್ಲಿ ಪ್ರೊ.ಸುಧಾಕರ್ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಸಾಹಿತ್ಯದ ಕಂಪನ್ನು ಮುಂದಿನ ಪೀಳಿಗೆಗೆ ಪಸರಿಸುವ ನಿಟ್ಟಿನಲ್ಲಿ ಸಂಶೋಧನೆ ನಡೆಯಬೇಕು ಎಂದು ಹೇಳಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಕತ್ತಿಗೆ ಚನ್ನಪ್ಪ, ಮೈಸೂರಿನ ಡಾ.ಬಿ. ಮಾದೇಶ್ ಮತ್ತಿತರರು ಉಪಸ್ಥಿತರಿದ್ದರು. ಎನ್‌ಇಎಸ್ ಕಾರ್ಯದರ್ಶಿ ಎಸ್.ವಿ. ತಿಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎನ್. ಸುಂದರ್‌ರಾಜ್ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಕನಕಶ್ರೀ ಪ್ರಶಸ್ತಿ ಪುರಸ್ಕೃತ ಪ್ರೊ.ಸುಧಾಕರ್ ದಂಪತಿಯನ್ನು ಅಭಿನಂದಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.