ADVERTISEMENT

ಸುವ್ಯವಸ್ಥಿತ, ನಿಯಮ ಬದ್ದ ಚುನಾವಣೆಗೆ ಸಿದ್ದತೆ ನಡೆಸಿ

ಅಧಿಕಾರಿಗಳಿಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2018, 10:17 IST
Last Updated 13 ಮಾರ್ಚ್ 2018, 10:17 IST
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಜಿಲ್ಲಾ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಜಿಲ್ಲಾ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು.   

ಹಾಸನ: ವಿಧಾನಸಭಾ ಚುನಾವಣೆಯನ್ನು ಸುವ್ಯವಸ್ಥಿತವಾಗಿ ಹಾಗೂ ನಿಯಮಬದ್ಧವಾಗಿ ನಡೆಸಲು ಅಗತ್ಯವಿರುವ ಸಿದ್ದತೆಗಳನ್ನು ಈಗಿನಿಂದಲೇ ಕೈಗೊಳ್ಳುವಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಸೂಚನೆ ನೀಡಿದರು.

ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿ ಈ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂವಾದ ನಡೆಯಿತು.

‘ಜಿಲ್ಲೆಯ ಎಲ್ಲಾ ಮತಗಟ್ಟೆಗಳ ಪರಿಶೀಲನೆ ಕಾರ್ಯ ಮುಗಿಸಿ ಅವುಗಳ ಸುಸ್ಥಿತಿ ಖಾತರಿ ಪಡಿಸಿಕೊಳ್ಳಿ. ಸೂಕ್ಷ್ಮ ಅತೀ ಸೂಕ್ಷ್ಮ, ಸಮಸ್ಯಾತ್ಮಕ ಮತಗಟ್ಟೆಗಳನ್ನು ಪಟ್ಟಿ ಮಾಡಿ ಅವುಗಳ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಮತದಾನದ ಸಂದರ್ಭ ವಿಶೇಷ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಗಮನಹರಿಸಿ’ ಎಂದು ನಿರ್ದೇಶನ ನೀಡಿದರು.

ADVERTISEMENT

‘ಮತಗಟ್ಟೆಗಳ ಮ್ಯಾಪಿಂಗ್ ಕಾರ್ಯಗಳು ಪೂರ್ಣಗೊಳ್ಳಬೇಕು. ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಹಲವು ಸಮಿತಿಗಳನ್ನು ತುರ್ತಾಗಿ ರಚಿಸಿ, ಅದರ ಸದಸ್ಯರು ತಮ್ಮ ಕಾರ್ಯ ವ್ಯಾಪ್ತಿಯ ಬಗ್ಗೆ ಮಾಹಿತಿ, ತರಬೇತಿ ನೀಡಬೇಕು’ ಎಂದು ತಿಳಿಸಿದರು.

‘ಮಾದರಿ ನೀತಿ ಸಂಹಿತೆ ಜಾರಿ ತಂಡ, ಖರ್ಚುವೆಚ್ಚ ಮೇಲ್ವಿಚಾರಣ ಸಮಿತಿ, ಮಾಧ್ಯಮ ದೃಢಿಕರಣ ಸಮಿತಿ ಮಾಧ್ಯಮ ಮೇಲ್ವಿಚಾರಣ ಸಮಿತಿ, ಫ್ಲೈಯಿಂಗ್ ಸ್ಕ್ವಾಡ್, ವಿಡಿಯೊ ವೀಕ್ಷಣಾ ತಂಡಗಳು ಸೇರಿ ಹಲವು ಸಮಿತಿ ರಚಿಸಿ ಮಾರ್ಗದರ್ಶನ ನೀಡಬೇಕು’ ಎಂದರು.

‘ಕರಪತ್ರ ಅಥವಾ ಪ್ರಚಾರ ಸಾಮಗ್ರಿಗಳಲ್ಲಿ ಮುದ್ರಣದ ಪ್ರಕಾಶಕರ ಹೆಸರು ಹಾಗೂ ಪ್ರತಿಗಳ ಸಂಖ್ಯೆ ಇರಬೇಕು. ಪ್ರಚಾರ ವಾಹನ ಬಳಕೆ ಖರ್ಚು ವೆಚ್ಚಗಳ ಲೆಕ್ಕಚಾರದ ಬಗ್ಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೂ ಮೊದಲೇ ಮಾಹಿತಿ ನೀಡಬೇಕು. ಮಾಧ್ಯಮಗಳಿಗೆ ಬರುವ ಪಾವತಿ ಸುದ್ದಿಗಳ ಬಗ್ಗೆಯೂ ನಿಗಾವಹಿಸಲು ತಂಡ ರಚಿಸಬೇಕು. ಪ್ರಚಾರ ಸಾಮಗ್ರಿ ಸಾರಿಗೆ, ಊಟೋಪಚಾರ ವೆಚ್ಚಗಳ ದರಪಟ್ಟಿ ನಿಗಧಿಪಡಿಸಿ ಅದನ್ನು ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತರಬೇಕು’ ಎಂದು ಅವರು ತಿಳಿಸಿದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್‌ವಾಡ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್‌. ಪೂರ್ಣಿಮಾ, ಉಪವಿಭಾಗಧಿಕಾರಿ ಎಚ್.ಎಲ್. ನಾಗರಾಜ್, ತಹಶೀಲ್ದಾರ್ ಶಿವಶಂಕರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.