ADVERTISEMENT

ಸೇವೆ ಕಾಯಂಗಾಗಿ ಅಂಗನವಾಡಿ ಸಿಬ್ಬಂದಿ ಧರಣಿ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2012, 19:30 IST
Last Updated 8 ಅಕ್ಟೋಬರ್ 2012, 19:30 IST

ಬೀದರ್: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ರಾಜ್ಯದಲ್ಲಿ 1 ಲಕ್ಷ 25 ಸಾವಿರಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇದ್ದಾರೆ. ಶಾಲಾಪೂರ್ವ ಶಿಕ್ಷಣದ ಜತೆಗೆ ಜನಗಣತಿ, ಆರೋಗ್ಯ, ಚುನಾವಣಾ ಕಾರ್ಯಗಳಿಗೂ ನೆರವಾಗುತ್ತಿದ್ದಾರೆ. ಆದರೂ, ಸೇವಾ ಭದ್ರತೆ ಕಲ್ಪಿಸಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಸಲ್ಲಿಸಿರುವ ಮನವಿ ಪತ್ರದಲ್ಲಿ ದೂರಿದ್ದಾರೆ.

ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ವಿವಿಧ ಯೋಜನೆಗಳಲ್ಲಿ ಮನೆ ಮಂಜೂರು ಮಾಡಬೇಕು. ಬೇರೆ ಇಲಾಖೆಯ ಕೆಲಸಗಳನ್ನು ವಹಿಸಬಾರದು. ಸರ್ಕಾರಿ ನೌಕರರಿಗೆ ನೀಡಲಾಗುವ 6 ತಿಂಗಳ ಹೆರಿಗೆ ರಜೆ ಮತ್ತು ಇತರೆ ಸೌಲಭ್ಯಗಳನ್ನು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೂ ವಿಸ್ತರಿಸಬೇಕು.
 
ಪಿಂಚಣಿ ಕನಿಷ್ಠ 5 ಸಾವಿರ ರೂಪಾಯಿ ನಿಗದಿಪಡಿಸಬೇಕು. ಸಭೆಗಳ ಭತ್ಯೆ ಕೊಡಬೇಕು. ಸದ್ಯ ಅಂಗನವಾಡಿ ಕೇಂದ್ರಗಳಿಗೆ ಪೂರೈಸುತ್ತಿರುವ ಆಹಾರ ಕಳಪೆಯಾಗಿದ್ದು, ಸ್ಥಳೀಯವಾಗಿ ಸಿದ್ಧಪಡಿಸಿದ ಗುಣಮಟ್ಟದ ಆಹಾರ ಪೂರೈಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಸಮಿತಿ ಸದಸ್ಯೆ ಲಕ್ಷ್ಮಿ ದಂಡಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.