ADVERTISEMENT

ಸೌಲಭ್ಯಕ್ಕೆ ಆಗ್ರಹಿಸಿ ಕಾಂಗ್ರೆಸ್ ಧರಣಿ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST
ಸೌಲಭ್ಯಕ್ಕೆ ಆಗ್ರಹಿಸಿ ಕಾಂಗ್ರೆಸ್ ಧರಣಿ
ಸೌಲಭ್ಯಕ್ಕೆ ಆಗ್ರಹಿಸಿ ಕಾಂಗ್ರೆಸ್ ಧರಣಿ   

ಕನಕಗಿರಿ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ವೈದ್ಯರ ನೇಮಕ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕನಕಗಿರಿ, ಕಾರಟಗಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಸೋಮವಾರ ಇಲ್ಲಿ ಧರಣಿ ಸತ್ಯಾಗ್ರಹ ನಡೆಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕೆಪಿಸಿಸಿ ಸದಸ್ಯ ಮುಕುಂದರಾವ್ ಭವಾನಿಮಠ ದನಕರುಗಳಿಗೆ ಬತ್ತದ ಹುಲ್ಲನ್ನು ತಿನ್ನಿಸಿ ಹೋರಾಟಕ್ಕೆ ಚಾಲನೆ ನೀಡಿದರು.

ಹಿಂಗಾರು ಹಾಗೂ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ನವಲಿ, ಕನಕಗಿರಿ. ಹುಲಿಹೈದರ ಹೋಬಳಿ  ಪ್ರದೇಶದ ಜನತೆ ಕಂಗಾಲಾಗ್ದ್ದಿದಾರೆ. ದನಕರುಗಳನ್ನು ರೈತರು ಅಗ್ಗದ ದರದಲ್ಲಿ ಮಾರಾಟ ಮಾಡಿ ಗುಳೆ ಹೋಗುತ್ತಿದ್ದಾರೆ. ಸರ್ಕಾರ ಇಲ್ಲಿ ತನಕ ಗೋಶಾಲೆ ಆರಂಭಿಸಿಲ್ಲ ಎಂದು ದೂರಿದರು.

30 ಹಾಸಿಗೆಗಳ ಆಸ್ಪತ್ರೆಗೆ ಒಬ್ಬ ವೈದ್ಯರು ಇಲ್ಲ, ಬಡ, ದುರ್ಬಲ ವರ್ಗದ ಜನತೆ ಆರೋಗ್ಯ ಸೇವೆಯಿಂದ ವಂಚಿತರಾಗಿದ್ದಾರೆ, ಗರ್ಭಿಣಿ ಮಹಿಳೆಯರ ಪರಿಸ್ಥಿತಿ ಹೇಳತೀರದಾಗಿದೆ ಎಂದು ತಿಳಿಸಿದರು.

ಜನ ಸಮುದಾಯದ ಸಹಭಾಗಿತ್ವದ ಜಲ ನಿರ್ಮಲ ಯೋಜನೆಯ ಕಾಮಗಾರಿ ಅನುಷ್ಠಾನಕ್ಕೆ ತರುವಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆ. ಫ್ಲೋರೈಡ್ ಮಿಶ್ರಿತ ನೀರು ಕುಡಿದ ಜನತೆ ವಿವಿಧ ರೋಗಗಳಿಂದ ಬಳಲುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರಿಗೆ ನಿರಂತರವಾಗಿ 12 ಗಂಟೆ ವಿದ್ಯುತ್ ಸರಬರಾಜು ಮಾಡುವಂತೆ ಅವರು ಆಗ್ರಹಿಸಿದರು. ಜಿಪಂ ಸದಸ್ಯ ಗಂಗಣ್ಣ ಸಮಗಂಡಿ, ಎಸ್ಟಿ ಜಿಲ್ಲಾ ಘಟಕದ ಅಧ್ಯಕ್ಷ ಯಮನೂರಪ್ಪ ಸಿಂಗನಾಳ, ಪ್ರಮುಖರಾದ ವಿಶ್ವನಾಥರೆಡ್ಡಿ ಹೊಸಮನಿ, ರಾಜಧರಖಾನ್, ಬಿ. ವಿ. ಜೋಶಿ, ಶಿವರೆಡ್ಡಿ ನವಲಿ, ಶಿವಲೀಲಾ ಪಾಟೀಲ ಇತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.