ADVERTISEMENT

ಹದಗೆಟ್ಟ ರಸ್ತೆ: ಸಸಿ ನೆಟ್ಟು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 19:30 IST
Last Updated 3 ಸೆಪ್ಟೆಂಬರ್ 2011, 19:30 IST

ಹಾವೇರಿ: ಹದಗೆಟ್ಟ ನಗರದ ರಸ್ತೆಗಳ ಸುಧಾರಣೆಗೆ ಒತ್ತಾಯಿಸಿ ನಗರದ ನಾಗರಿಕರು ಸ್ಟೇಷನ್ ರಸ್ತೆಯಲ್ಲಿ ಸಸಿಗಳನ್ನು ನೆಟ್ಟು ಶನಿವಾರ ವಿನೂತನ ಪ್ರತಿಭಟನೆ ನಡೆಸಿದರು.

 ಸತತ ಸುರಿಯುತ್ತಿರುವ ಜಿಟಿ ಜಿಟಿ ಮಳೆ ಹಾಗೂ ಒಳ ಚರಂಡಿ ಕಾಮಗಾರಿಯಿಂದ ರಸ್ತೆಗಳು ಕೆಸರಿನ ಗದ್ದೆಗಳಂತಾಗಿದ್ದು, ಜನರು ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ. ನಗರಸಭೆ ರಸ್ತೆ ಸುಧಾರಣೆ ಮಾಡದೇ ನಿರ್ಲಕ್ಷ್ಯ ವಹಿಸಿದೆ ಎಂದು  ಆರೋಪಿಸಿದರು. 

 ಪ್ರತಿಭಟನಾಕಾರರು ನಗರದ ಸುಭಾಷ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಸಸಿಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು. ಪ್ರತಿಭಟನೆ ನೇತೃತ್ವ ವಹಿಸಿದ್ದ ನಗರಸಭೆ ಸದಸ್ಯ ಜಮಾದಾರ ಮಾತನಾಡಿ, `ಸಂಪೂರ್ಣ ಕೆಸರುಮಯವಾಗಿರುವ ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗಿದೆ~ ಎಂದು ಆರೋಪಿಸಿದರು.  ಈ ಕುರಿತು ಹಲವು ಬಾರಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಎಂದರು.

ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ ಹಾಗೂ ಆಯುಕ್ತ ಎಚ್.ಕೆ. ರುದ್ರಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ತಕ್ಷಣವೇ ರಸ್ತೆ ದುರಸ್ತಿ ಕಾಮಗಾರಿ ಆರಂಭಿಸುವ ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ನಿಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.