ದಾವಣಗೆರೆ: ಪ್ರಗತಿಮುಖಿ ಭಾರತದಲ್ಲಿ ಶೇ. 26ರಷ್ಟು ಮಂದಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಬೆಂಗಳೂರಿನ ಶಿಕ್ಷಣ ತಜ್ಞ ಪ್ರೊ.ಕೆ.ಇ. ರಾಧಾಕೃಷ್ಣ ಅಭಿಪ್ರಾಯಪಟ್ಟರು.
ನಗರದ ಬಾಪೂಜಿ ಎಂಬಿಎ ಕಾಲೇಜಿನಲ್ಲಿ ರೋಟರಿ ಕ್ಲಬ್ ದಾವಣಗೆರೆ ಮಿಡ್ಟೌನ್ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ `ಪರೀಕ್ಷೆ ಒಂದು ಹಬ್ಬ- ಬನ್ನಿ ಆಚರಿಸೋಣ~ ಪರಿಕಲ್ಪನೆಯ ಒಂದು ದಿನದ ವ್ಯಕ್ತಿತ್ವ ವಿಕಸನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಒಟ್ಟಾರೆ 32 ಕೋಟಿ ಶಿಕ್ಷಣ ವಂಚಿತರ ಪೈಕಿ 25 ಕೋಟಿ 14 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳು ಸೇರಿದ್ದಾರೆ. ಶಿಕ್ಷಣ ವಂಚಿತ ಮಕ್ಕಳನ್ನು ಆ ಕ್ಷೇತ್ರದತ್ತ ಬರುವಂತೆ ನಮ್ಮ ಯೋಜನೆಗಳನ್ನು ರೂಪಿಸಬೇಕಿದೆ. ಅಭಿವೃದ್ಧಿಯಲ್ಲಿ ತೀರಾ ಹಿಂದುಳಿದ ರಾಜ್ಯಗಳಾದ ಬಿಹಾರ, ಒಡಿಶಾ ಮತ್ತಿತರ ರಾಜ್ಯಗಳ ವಿದ್ಯಾರ್ಥಿಗಳು ಭಾರತೀಯ ನಾಗರಿಕ ಸೇವಾ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಕಠಿಣ ಪರಿಶ್ರಮದಿಂದ ಅವರೂ ಮುಂದೆ ಬರಬಹುದು ಎಂಬುದನ್ನು ಸಾಧಿಸಿ ತೋರಿಸುತ್ತಿದ್ದಾರೆ. ಇದನ್ನು ವಿದ್ಯಾರ್ಥಿಗಳು ಮನಗಾಣಬೇಕು ಎಂದು ಸಲಹೆ ಮಾಡಿದರು.
ಬಾಪೂಜಿ ಬಿ-ಸ್ಕೂಲ್ಸ್ ಅಧ್ಯಕ್ಷ ಅಥಣಿ ಎಸ್. ವೀರಣ್ಣ ಮಾತನಾಡಿ, ಹಿಂದೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಸಾಕಷ್ಟು ತೊಂದರೆಯಿತ್ತು. ಆದರೆ, ಇಂದು ಯಾವುದೇ ವಯೋಭೇದವಿಲ್ಲದೆ ಎಲ್ಲರೂ ಶಿಕ್ಷಣ ಪಡೆಯಬಹುದಾಗಿದೆ. ಮಾತ್ರವಲ್ಲ ಎಲ್ಲರಿಗೂ ಕಡ್ಡಾಯ ಶಿಕ್ಷಣ ಮಸೂದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಅಂತೆಯೇ ವಿದ್ಯಾರ್ಥಿಗಳು ಇಂಗ್ಲಿಷ್ ಕಲಿಕೆಗೆ ಒತ್ತು ನೀಡಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬೆಳ್ಳಶೆಟ್ಟಿ, ರೋಟರಿ ನಿಕಟಪೂರ್ವ ಜಿಲ್ಲಾ ಗವರ್ನರ್ ಆರ್. ಎಸ್. ನಾರಾಯಣ ಸ್ವಾಮಿ, ರೋಟರಿ ಕ್ಲಬ್ ಅಧ್ಯಕ್ಷ ಡಾ.ಬಿ.ಇ. ರಂಗಸ್ವಾಮಿ, ಕಾರ್ಯದರ್ಶಿ ಡಾ.ಎಚ್.ಎಸ್. ರವಿಕುಮಾರ್ ಪಾಟೀಲ್, ಡಾ.ಶಂಕರ್, ಆರ್.ಎ. ಚೇತನ್ ಇತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.