ADVERTISEMENT

ಹೈ.ಕ. ಅಭಿವೃದ್ಧಿಗೆ ಬದ್ಧತೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 19:30 IST
Last Updated 5 ಅಕ್ಟೋಬರ್ 2012, 19:30 IST
ಹೈ.ಕ. ಅಭಿವೃದ್ಧಿಗೆ ಬದ್ಧತೆ ಅಗತ್ಯ
ಹೈ.ಕ. ಅಭಿವೃದ್ಧಿಗೆ ಬದ್ಧತೆ ಅಗತ್ಯ   

ಗುಲ್ಬರ್ಗ:  ಅಧಿಕಾರಿವರ್ಗ ತಮ್ಮ ದೃಷ್ಟಿಕೋನ ಬದಲಾಯಿಸಿಕೊಳ್ಳುವುದರ ಜೊತೆಗೆ ಈ ಭಾಗದ ಅಭಿವೃದ್ಧಿಗೆ ತ್ಯಾಗ ಮತ್ತು ಬದ್ಧತೆಯಿಂದ ಕೆಲಸ ಮಾಡಿದಾಗ ಮಾತ್ರ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿ ಸಾಧ್ಯ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ. ಎಸ್. ಚಂದ್ರಶೇಖರ ಅಭಿಪ್ರಾಯಪಟ್ಟರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಅಧ್ಯಯನ ಮತ್ತು ಯೋಜನಾ ವಿಭಾಗ, ಸ್ಕೂಲ್ ಆಫ್ ಬಿಸಿನೆಸ್ ಸ್ಟಡೀಸ್ ಆಶ್ರಯದಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಡಾರ್ವಿನ್ ಸಭಾಂಗಣದಲ್ಲಿ  ~ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿ- ಸವಾಲುಗಳು~ ಕುರಿತು ಶುಕ್ರವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜಕೀಯ ಇಚ್ಛಾಶಕ್ತಿಯ ಜೊತೆಗೆ ಇಲ್ಲಿನ ಸಮಸ್ಯೆ ಹಾಗೂ ಸವಾಲುಗಳ ಮಾಹಿತಿ ಪಡೆದು ಆ ದಿಶೆಯಲ್ಲಿ ಪ್ರಯತ್ನಿಸಿದಾಗ ಕನಿಷ್ಠ ಮಟ್ಟದ ಅಸಮಾನತೆಯನ್ನು ನಿವಾರಿಸಬಹುದು. ಹಿಂದುಳಿದ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಶೇ 60ರಷ್ಟು ಹಣ ಖರ್ಚು ಮಾಡಲಾಗಿದೆ. ಆದರೆ ಶೇ 40ರಷ್ಟು ಮಾತ್ರ  ಅಭಿವೃದ್ಧಿಯಾಗಿರುವುದು ವಿಷಾದನೀಯ ಎಂದರು. ಮುಖ್ಯ ಅತಿಥಿಯಾಗಿದ್ದ ಗುಲ್ಬರ್ಗ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಪ್ರೊ. ಛಾಯಾ ದೇಗಾಂವಕರ್ ಮಾತನಾಡಿದರು.

ಬೆಂಗಳೂರಿನ ಸಾಮಾಜಿಕ, ಆರ್ಥಿಕ ಪರಿವರ್ತನಾ ಸಂಸ್ಥೆಯ ಅಭಿವೃದ್ಧಿ ಮತ್ತು ವಿಕೇಂದ್ರೀಕರಣ ವಿಭಾಗದ ಮುಖ್ಯಸ್ಥ ಡಾ. ದೇವೇಂದ್ರಬಾಬು, ಪ್ರೊ. ಎಂ.ವಿ. ಅಲಗವಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಾಗಾರದ ಸಂಚಾಲಕಿ ಪುಷ್ಪಾ ಎಂ. ಸವದತ್ತಿ ಪ್ರಾಸ್ತಾವಿಕ ಮಾತನಾಡಿದರು. ಪ್ರೊ. ರಾಜನಾಳಕರ್ ಲಕ್ಷ್ಮಣ್ ಸ್ವಾಗತಿಸಿದರು. ಪ್ರಜ್ವಿನಿ ಕಾರ್ಯಕ್ರಮ ನಿರೂಪಿಸಿದರು. ತ್ರಿನಾದ್ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.