ಹುಬ್ಬಳ್ಳಿ: ವಿದ್ಯಾರ್ಥಿ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿ– ಪಂಗಡ ಹಾಗೂ ಇತರೆ ಹಿಂದುಗಳಿದ ವರ್ಗದ ವಿದ್ಯಾರ್ಥಿ ವೇತನ ಪಾವತಿ ವಿಳಂಬವಾಗುತ್ತಿದ್ದು, ಬಡ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಇನ್ನು 15 ದಿನಗಳ ಒಳಗೆ ನೀಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಸರ್ಕಾರ ನೀಡುತ್ತಿರುವ ವಿದ್ಯಾರ್ಥಿ ವೇತನ ಸಾಕಾಗುತ್ತಿಲ್ಲ. 13 ವರ್ಷಗಳ ಹಿಂದೆ ವಿದ್ಯಾರ್ಥಿ ವೇತನವನ್ನು ಪರಿಷ್ಕರಣೆ ಮಾಡಲಾಗಿತ್ತು. ಈಗ ಕನಿಷ್ಠ ₹2,200 ಹಾಗೂ ಗರಿಷ್ಠ ₹12,000 ಇದೆ. ಅದನ್ನು ಕನಿಷ್ಠ ₹12,000 ಮಾಡಬೇಕು. ಹಣದುಬ್ಬರವನ್ನು ಪರಿಗಣಿಸಿ ಏರಿಕೆ ಮಾಡಬೇಕು ಎಂದು ಎಬಿವಿಪಿ ಸಂಘಟನಾ ಕಾರ್ಯದರ್ಶಿ ತೇಜಸ್ವಿ ಒತ್ತಾಯಿಸಿದರು.
ಎಸ್ಸಿ– ಎಸ್ಟಿ ವರ್ಗದ ವಿದ್ಯಾರ್ಥಿ ಅಪಾರ ಸಂಖ್ಯೆಯಲ್ಲಿ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಕೇವಲ 2 ಸಾವಿರ ವಿದ್ಯಾರ್ಥಿಗಳಿಗೆ ಮಾತ್ರ ಫೆಲೋಶಿಪ್ ನೀಡಲಾಗುತ್ತಿದ್ದು, ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇತರ ಹಿಂದುಳಿದ ವರ್ಗಗಳ 300 ವಿದ್ಯಾರ್ಥಿಗಳಿಗೆ ಮಾತ್ರ ಫೆಲೋಶಿಪ್ ನೀಡುತ್ತಿರುವುದು ಸರಿಯಲ್ಲ ಎಂದರು.
ವಿದ್ಯಾರ್ಥಿ ವಸತಿ ನಿಲಯಗಳ ಸಂಖ್ಯೆ ಹೆಚ್ಚಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಬೇಕು ಎಂದು ಆಗ್ರಹಿಸಿದರು. ಮುಖಂಡರಾದ ತೇಜಸ್ ಗೋಕಾಕ್, ಶಿವಕುಮಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.