ADVERTISEMENT

ಅಪೂರ್ಣ ಕಾಮಗಾರಿ ಉದ್ಘಾಟನೆ: ಆರೋಪ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 8:20 IST
Last Updated 11 ಅಕ್ಟೋಬರ್ 2011, 8:20 IST

ಬಾಗಲಕೋಟೆ: ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಶಾಸಕ ದೊಡ್ಡನಗೌಡ ಪಾಟೀಲ ಅವರು ಹುನಗುಂದ ತಾಲ್ಲೂಕಿನಲ್ಲಿ ಇತ್ತೀಚೆಗೆ ಅಪೂರ್ಣ ಮತ್ತು ಕಳಪೆ ಕಾಮಗಾರಿಗಳನ್ನು ಉದ್ಘಾಟಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿಜಯಾನಂದ ಕಾಶಪ್ಪನವರ ಆರೋಪಿಸಿದರು.

ನಗರದಲ್ಲಿ ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅವಧಿಯಲ್ಲಿನ ವಿವಿಧ ಕಾಮಗಾರಿಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎಂದು ಸಚಿವರು ಸುಳ್ಳು ಹೇಳಿದ್ದಾರೆ ಎಂದು ದೂರಿದರು.

ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರು ಲೋಕೋಪ ಯೋಗಿ ಸಚಿವರಾಗಿದ್ದಾಗ ಆರಂಭ ಗೊಂಡಿದ್ದ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಬಿಜೆಪಿ ಸಚಿವರು ತಮ್ಮ ಅವಧಿಯಲ್ಲಿ ಆಗಿದೆ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇಳಕಲ್ ಪಟ್ಟಣದ ಮಧ್ಯಭಾಗ ದಲ್ಲಿ ನಿರ್ಮಾಣವಾಗಿರುವ ಸೇತುವೆ ಇನ್ನೂ ಪೂರ್ಣಗೊಂಡಿಲ್ಲ ಅಲ್ಲದೇ ಕಳಪೆ ಕಾಮಗಾರಿ ನಡೆದಿದೆ. ಇಷ್ಟಾ ದರೂ ಸಚಿವರು ಉದ್ಘಾಟಿಸಿದ್ದಾರೆ ಎಂದು ಹೇಳಿದರು.

ಲೋಕಾಯುಕ್ತರಿಗೆ ದೂರು: ಹುನಗುಂದ ತಾಲ್ಲೂಕಿನ 63 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ರೂ. 20 ಕೋಟಿ ಯೋಜನೆಯಲ್ಲಿ ಶಾಸ ಕರು ಭಾರಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಇದು ವರೆಗೂ ಒಂದು ಹಳ್ಳಿಗೂ ಕುಡಿಯುವ ನೀರು ಪೂರೈಕೆಯಾಗಿಲ್ಲ, ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡು ವುದಾಗಿ ತಿಳಿಸಿದರು.

ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಂದ 63 ಶಾಸಕರು ಹಣ ಪಡೆದು ಕೊಂಡಿದ್ದಾರೆ ಎಂಬ ಮಾಹಿತಿ ಅವರ ದಿನಚರಿಯಲ್ಲಿ ಪತ್ತೆಯಾಗಿದ್ದು,  ಹಣಪಡೆದವರಲ್ಲಿ ಶಾಸಕ ದೊಡ್ಡನ ಗೌಡ ಪಾಟೀಲ ಅವರು ಒಬ್ಬರಾಗಿದ್ದು, ಶೀಘ್ರದಲ್ಲೇ ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದರು.

ನಗರಸಭೆ ಸಾಮಾನ್ಯ ಸಭೆ ನಾಳೆ
ಬಾಗಲಕೋಟೆ:
ಬಾಗಲಕೋಟೆ ನಗರ ಸಭೆಯ ಸಾಮಾನ್ಯ ಸಭೆ ಇದೇ 12ರಂದು ಬೆಳಿಗ್ಗೆ 10.30ಕ್ಕೆ ನಗರಸಭೆ ಸಭಾಭವನದಲ್ಲಿ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.