ಬಾಗಲಕೋಟೆ: ‘ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸ್ವಾಯುತ್ತತೆಯನ್ನು ರಾಜ್ಯ ಸರ್ಕಾರ ಕಸಿದುಕೊಳ್ಳುತ್ತಿದೆ’ ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಜಿಲ್ಲಾ ಘಟಕದಿಂದ ಬುಧವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಣದಿಂದ ಕಟ್ಟಡ ನಿರ್ಮಿಸಲು ಹೊರಟಿರುವ ಸರ್ಕಾರ ತನ್ನ ನಿರ್ಧಾರದಿಂದ ಕೂಡಲೇ ಹಿಂದೆ ಸರಿಯಬೇಕು’ ಎಂದು ಆಗ್ರಹಿಸಿದರು.
‘ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ವಿವಾದಿತ ಭೂಮಿಯಾದ ಅರ್ಚಕರ ಹಳ್ಳಿಗೆ ಸ್ಥಳಾಂತರ ಮಾಡ ಹೊರಟಿರುವುದರ ಹಿಂದೆ ಭಾರಿ ಭ್ರಷ್ಟಾಚಾರ ಕಂಡು ಬರುತ್ತಿದೆ. ಯಾವುದೇ ಚರ್ಚೆ ಹಾಗೂ ಸಾರ್ವಜನಿಕರ ಅಭಿಪ್ರಾಯ ಪಡೆಯದೇ ಏಕಾಏಕೀ ನಿರ್ಧಾರ ಕೈಗೊಂಡಿರುವುದು’ ಖಂಡನೀಯ ಎಂದರು. ‘ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಣವನ್ನು ಕೇವಲ ಸಂಶೋಧನೆಗಳಿಗೆ ಸಂಬಂಧಿಸಿದ ಕೆಲಸಗಳಿಗೆ ಮಾತ್ರ ಬಳಸ ಬೇಕಿದೆ. ಆದರೆ ವಿಶ್ವವಿದ್ಯಾಲಯದಲ್ಲಿನ ₨1000 ಕೋಟಿಗೂ ಹೆಚ್ಚಿನ ಹಣವನ್ನು ಕಟ್ಟಡ ಕಟ್ಟಲು ಸರ್ಕಾರ ಬಳಸಿಕೊಳ್ಳಲು ಮುಂದಾಗಿದೆ’ ಆರೋಪಿಸಿದರು.
‘ಈ ನಿರ್ಧಾರದಿಂದ ಸಂಶೋಧನಾ ಚಟುವಟಿಕೆಗಳ ಮೇಲೆ ಪ್ರಭಾವ ಬೀರುತ್ತದೆ. ಅಧಿಕಾರ ಮೀರಿದ ಕಾರ್ಯದಿಂದ ವಿವಿಯಲ್ಲಿನ ಸ್ವಾಯತ್ತತೆಗೆ ಧಕ್ಕೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ವಿಶ್ವವಿದ್ಯಾಲಯದ ಮೊದಲ ಆದ್ಯತೆ ಸಂಶೋಧನೆ ಮತ್ತು ಆಡಳಿತ ನಿರ್ವಹಣೆಯಾಗಿದೆ. ಹೆಲ್ತ್ಸಿಟಿ ನಿರ್ಮಿಸುವುದಲ್ಲ. ಸರ್ಕಾರ ಇದನ್ನು ಅರ್ಥಮಾಡಿಕೊಳ್ಳಬೇಕು. ವಿವಿಯ ಸ್ವಾಯತ್ತತೆ ಕಸಿದುಕೊಳ್ಳಬಾರದು. ಅದಕ್ಕೆ ಪೂರ್ಣ ಸ್ವಾತಂತ್ರ ಕೊಡಬೇಕು. ರಾಜ್ಯಪಾಲರು ಮದ್ಯ ಪ್ರವೇಶಿಸಿ ಕೂಡಲೇ ಸರ್ಕಾರದ ನಿರ್ಧಾರವನ್ನು ತಡೆ ಹಿಡಿಯಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.