ADVERTISEMENT

‘ಎರಡು ಕ್ಷೇತ್ರಗಳಲ್ಲೂ ಸಿ.ಎಂಗೆ ಸೋಲು’

ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿಶ್ಚಿತ: ಮುರಳಿಧರರಾವ್ ಇಂಗಿತ

​ಪ್ರಜಾವಾಣಿ ವಾರ್ತೆ
Published 9 ಮೇ 2018, 7:39 IST
Last Updated 9 ಮೇ 2018, 7:39 IST

ಬಾದಾಮಿ: ‘ಮೇ 15ರ ನಂತರ ಕರ್ನಾಟಕ ಕಾಂಗ್ರೆಸ್‌ ಮುಕ್ತವಾಗಲಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚಿಸುವುದು ನಿಶ್ಚಿತ. ಸಿ.ಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಹಾಗೂ ಬಾದಾಮಿ ಎರಡೂ ಕ್ಷೇತ್ರಗಳಲ್ಲಿ ಸೋಲುವುದು ನಿಶ್ಚಿತ’ ಎಂದು ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಮುರಳಿಧರರಾವ್‌ ಹೇಳಿದರು.

ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯಾದ್ಯಂತ ಈಗಾಗಲೇ ಯಡಿಯೂರಪ್ಪ ಪರಿವರ್ತನಾ ಯಾತ್ರೆ ಮಾಡಿದ್ದಾರೆ. ಹಾಗಾಗಿ ಬಿಜೆಪಿಗೆ ನಿಚ್ಚಳ ಬಹುಮತ ಸಿಗಲಿದೆ’ ಎಂದು ತಿಳಿಸಿದರು.

‘ಯಡಿಯೂರಪ್ಪ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ವೀರಶೈವ ಲಿಂಗಾಯತ ಧರ್ಮ ಒಡೆದಿದ್ದಾರೆ. ಹಾಗಾಗಿ ಆ ಸಮುದಾಯದವರು ಕಾಂಗ್ರೆಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದರು.

ADVERTISEMENT

ಬಿಜೆಪಿ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ. ನೀರಾವರಿ ಯೋಜನೆಗೆ ಹೆಚ್ಚಿನ ಅನುದಾನ, ವಿದ್ಯುತ್‌ ಸೌಲಭ್ಯ ಸೇರಿದಂತೆ ವಿಧಾನಸಭಾವಾರು ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಮುರಳಿಧರರಾವ್‌ ಹೇಳಿದರು.

‘ಮಹದಾಯಿ ನದಿ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ. ಉತ್ತರ ಕರ್ನಾಟಕದ ಪ್ರತಿ ಮನೆಗೂ ಮಹದಾಯಿ ನದಿ ನೀರು ತಲುಪಿಸಲು ಬಿಜೆಪಿ ಬದ್ಧವಾಗಿದೆ’ ಎಂದರು.

ತಾಲ್ಲೂಕು ಘಟಕದ ಬಿಜೆಪಿ ಅಧ್ಯಕ್ಷ ಎಸ್‌.ಟಿ. ಪಾಟೀಲ,ಮೇಲ್ಮನೆ ಸದಸ್ಯ ಅರುಣ ಶಹಾಪೂರ, ಮಾಜಿ ಶಾಸಕರಾದ ಎಂ.ಕೆ. ಪಟ್ಟಣಶೆಟ್ಟಿ, ರಾಜಶೇಖರ ಶೀಲವಂತ, ಎಂ.ವಿ. ಬನ್ನಿ, ಅಶೋಕ ಕಟ್ಟಿಮನಿ, ಬಿಜೆಪಿ ಮುಖಂಡರಾದ ಮಹಾಂತೇಶ ಮಮದಾಪುರ, ಸಿದ್ದಣ್ಣ ಶಿವನಗುತ್ತಿ, ಬಿ.ಪಿ. ಹಳ್ಳೂರ, ಕುಮಾರಗೌಡ ಜನಾಲಿ, ಸಿದ್ದನಗೌಡ ಪಾಟೀಲ, ಈಶ್ವರಚಂದ್ರ ಹೊಸಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.