ಬಾದಾಮಿ: ‘ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭ್ರಷ್ಟಾಚಾರದ ಕಾರಣ ಜೈಲಿಗೆ ಹೋಗಿದ್ದ ಬಿ.ಎಸ್. ಯಡಿಯೂರಪ್ಪ ಜೀವನ ಪರ್ಯಂತ ಬಿಜೆಪಿಗೆ ಮರಳುವುದಿಲ್ಲ. ಆ ಪಕ್ಷ ನಿರ್ನಾಮ ಮಾಡುತ್ತೇನೆ ಎಂದು ಹೇಳಿದ್ದರು. ಈಗ ಮತ್ತೆ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿರುವ ಬಿಜೆಪಿ ನೈತಿಕವಾಗಿ ದಿವಾಳಿಯಾಗಿದೆ’ ಎಂದು ಆರೋಪಿಸಿದರು.
ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಸ್ವತಃ ಆರ್ಎಸ್ಎಸ್ ಸಮೀಕ್ಷೆ ಹೇಳಿದೆ. ಇದು ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿರುವ ದ್ಯೋತಕ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಬಿಜೆಪಿ ಕೇಂದ್ರದಲ್ಲಿ ತಾನು ಮಾಡಿದ ಅಭಿವೃದ್ಧಿಯ ಮಾಹಿತಿ ಹೇಳುತ್ತಿಲ್ಲ.ಬರೀ ಕೋಮು ದ್ವೇಷ ಬೆಳೆಸಿ ಜಾತಿ–ಧರ್ಮಗಳ ನಡುವೆ ಒಡಕು ಮೂಡಿಸಿ ಅಧಿಕಾರ ಹಿಡಿಯಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರ ಐದು ವರ್ಷದಲ್ಲಿ ಅನ್ನಭಾಗ್ಯ, ಕೃಷಿ ಭಾಗ್ಯ , ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ, ಕ್ಷೀರಭಾಗ್ಯ, ಉಚಿತ ವಿದ್ಯುತ್, ನೀರಾವರಿ ಸೌಲಭ್ಯ ಕಲ್ಪಿಸಿದೆ ಎಂದು ಹೇಳಿದರು.
ಮೋದಿ ವಿರುದ್ಧ ಟೀಕೆ: ಅಧಿಕಾರಕ್ಕೆ ಬಂದರೆ ಬ್ಯಾಂಕ್ ಖಾತೆಯಲ್ಲಿ ತಲಾ ₹15 ಲಕ್ಷ ಜಮಾ ಮಾಡುವುದಾಗಿ ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮೋಸ ಮಾಡಿದ್ದಾರೆ. ವರ್ಷದಲ್ಲಿ 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಹೇಳಿದ್ದರು. ಅದೂ ಆಗಲಿಲ್ಲ. ಬರೀ ಸುಳ್ಳು ಹೇಳುತ್ತಾ ದಿನದೂಡುತ್ತಿದ್ದಾರೆ ಎಂದು ಟೀಕಿಸಿದರು.
ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್– ಜೆಡಿಎಸ್ ನಡುವೆ ಯಾವುದೇ ಒಳ ಒಪ್ಪಂದ ಆಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉಗ್ರಪ್ಪ ಸ್ಪಷ್ಟಪಡಿಸಿದರು.
ಎಂಎಲ್ಸಿ ಅಬ್ದುಲ್ ಜಬ್ಬಾರ್, ಎಂ. ವೆಂಕಟೇಶ, ಅನಿಲ್ಕುಮಾರ ದಡ್ಡಿ, ಆರ್.ಡಿ. ದಳವಾಯಿ, ಪ್ರಕಾಶ ನಾಯ್ಕರ್, ಸುನಿಲ್ಕುಮಾರ, ಶಾಂತರಾಜ ಕೋಟನಕರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.