ಜಮಖಂಡಿ: ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ಅಕ್ರಮವಾಗಿ ತೆರೆಯಲಾಗಿದೆ ಎನ್ನಲಾದ ಮೂರು ಮದ್ಯದಂಗಡಿ ತೆರವುಗೊಳಿಸಲು ಆಗ್ರಹಿಸಿ ಗ್ರಾಮಸ್ಥರು ಹಾಗೂ ವಿವಿಧ ಮಹಿಳಾ ಸಂಘಟನೆಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 5ನೇ ದಿನವಾದ ಶುಕ್ರವಾರವೂ ಮುಂದುವರಿದಿತ್ತು.
ಶಾಸಕ ಸಿದ್ದು ನ್ಯಾಮಗೌಡ ಅವರು ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಮಸ್ಯೆ ಕುರಿತು ಮಾಹಿತಿ ಪಡೆದರು. ನಂತರ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ಜೊತೆಗೆ ದೂರವಾಣಿ ಮೂಲಕ ಮಾತನಾಡಿ, ಇದೇ 23 ರಂದು ತೊದಲಬಾಗಿ ಗ್ರಾಮಕ್ಕೆ ಬಂದು ಮದ್ಯದಂಗಡಿ ಮಾಲೀಕರಿಗೆ ನೋಟಿಸ್ ನೀಡುವುದಾಗಿ ತಿಳಿಸಿದರು ಎನ್ನಲಾಗಿದೆ.
ಮೊದಲು ಮದ್ಯದಂಗಡಿ ಮುಚ್ಚಿಸಬೇಕು. ನಂತರ ನೋಟಿಸ್ ನೀಡಿ ವಿಚಾರಣೆ ನಡೆಸಬೇಕು ಎಂದು ಪಟ್ಟು ಹಿಡಿದರು. ಹೀಗಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಎಂದು ತಾಲ್ಲೂಕು ಪಂಚಾಯ್ತಿ ಸದಸ್ಯ ಶ್ರೀಮಂತ ಚೌರಿ ತಿಳಿಸಿದರು.
ಗಣೇಶ ಬಡಿಗೇರ, ಪ್ರಕಾಶ ಕೋಲಾರ, ಲಕ್ಷ್ಮಣ ಹರನಾಳ, ಸುಧೀರ ಭಜಂತ್ರಿ, ಸಂತೋಷ ಚೌರಿ, ಭೀಮಸಿ ಜಾನೋಜಿ, ಈರಪ್ಪ ಚೌರಿ ಮತ್ತಿತರರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.