ಬಾಗಲಕೋಟೆ: ಕಬ್ಬು ದರ ನಿಗದಿಗಾಗಿ ಕಾನೂನು ರೂಪಿಸಲು ರಚಿಸಲಾಗಿದ್ದ ಎಸ್.ಎ.ಪಾಟೀಲ್ ಅಧ್ಯಕ್ಷತೆಯ ಎಸ್ಎಪಿ ಸಮಿತಿಯ ವರದಿಯನ್ನು ರಾಜ್ಯ ಸರ್ಕಾರ ತಕ್ಷಣ ಜಾರಿಗೆ ತರಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಬೇರೆ ಬೇರೆ ರಾಜ್ಯಗಳ ಕಬ್ಬು ದರ ನಿಗದಿ ಪದ್ಧತಿಯ ಬಗ್ಗೆ ಅಧ್ಯಯನ ಮಾಡಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿರುವ ಸಮಿತಿ ವರದಿ ಜಾರಿಗೊಳಿಸಿ ಕಬ್ಬು ಬೆಳೆಗಾರರ ಹಿತ ರಕ್ಷಣೆ ಮಾಡಬೇಕು ಎಂದರು.
ಬಾಗಲಕೋಟೆ ಜಿಲ್ಲೆಯ ಕೆಲವು ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ 2009-10ನೇ ಸಾಲಿನ ರೂ. 72 ಕೋಟಿ ಹಾಗೂ 2010-11ನೇ ಸಾಲಿಗೆ ರೂ. 120 ಕೋಟಿ ಬಾಕಿ ಉಳಿಸಿಕೊಂಡಿವೆ, ಅಲ್ಲದೇ ಕಬ್ಬಿನ ಮೊದಲ ಕಂತು ಸಹ ಕಾರ್ಖಾನೆಗಳು ನೀಡಿದೇ ರೈತರಿಗೆ ದ್ರೋಹ ಮಾಡಿವೆ ಎಂದು ದೂರಿದರು.
ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿದೆ. ಅಕ್ಟೋಬರ್ ಮೊದಲ ವಾರದಲ್ಲಿ ಮುಖ್ಯಮಂತ್ರಿಗಳು ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನ ಕಬ್ಬು ಅರೆಯುವ ಮುನ್ನ ಕಾರ್ಖಾನೆಗಳು ರೈತರಿಗೆ ಕಬ್ಬು ನೋಂದಾವಣೆ ಪದ್ಧತಿ ಆಧಾರದಂತೆ ಕಬ್ಬು ಕಟಾವು ಮಾಡಲು ಜಿಲ್ಲಾಧಿಕಾರಿಗಳು ಕಾರ್ಖಾನೆಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಸಕ್ಕರೆ ನಿಯಂತ್ರಣ ಕಾಯ್ದೆ ಪ್ರಕಾರ ಕಬ್ಬು ಪೂರೈಸಿದ ರೈತರಿಗೆ 15 ದಿನಗಳೊಳಗಾಗಿ ಕಬ್ಬಿನ ಮೊದಲ ಕಂತನ್ನು ಪಾವತಿಸಬೇಕು, ಈ ಬಗ್ಗೆ ಜಿಲ್ಲಾಡಳಿತ ಕಠಿಣ ಕ್ರಮಕೈಗೊಳ್ಳದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕೇಂದ್ರಕ್ಕೆ ನೋಟಿಸ್
ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವ ಸಂಬಂಧ ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿ ಜಾರಿಯಲ್ಲಿ ವಿಳಂಬ ಧೋರಣೆ ಅನುಸರಿಸಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ ಎಂದು ಅವರು ತಿಳಿಸಿದರು.
ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ವರದಿ ಜಾರಿಯಲ್ಲಿ ವಿಳಂಬ ಧೋರಣೆ ಅನುಸರಿಸಿದ ಕೇಂದ್ರದ ಕ್ರಮದ ವಿರುದ್ಧ ಭಾರತೀಯ ರೈತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಚಂಗಲ್ರೆಡ್ಡಿ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಪರಿಶೀಲಿಸಿದ ಕೋರ್ಟ್ ಇದೇ 16ರಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ ಎಂದು ಹೇಳಿದರು.
ಕಾರ್ಯಾಗಾರ
ರಾಜ್ಯಮಟ್ಟದ ಕಬ್ಬು ಬೆಳೆಗಾರರ ಕಾರ್ಯಾಗಾರ ಇದೇ 29 ಮತ್ತು 30 ರಂದು ಕೂಡಲಸಂಗಮದಲ್ಲಿ ಏರ್ಪಡಿಸಲಾಗಿದೆ. ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.
ಭಾರತೀಯ ರೈತ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಚಂಗಲ್ರೆಡ್ಡಿ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ ಎಂದು ಅವರು ತಿಳಿಸಿದರು. ಕಾರ್ಯಾಗಾರದಲ್ಲಿ ರಾಜ್ಯದ ಆಯ್ದ 300ರಿಂದ 500 ಕಬ್ಬು ಬೆಳೆಗಾರರು ಪಾಲ್ಗೊಳ್ಳಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗಪ್ಪ ಸುರಗಾವಿ, ಮುಧೋಳ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಗಣಿ, ಮುಖಂಡರಾದ ಸದಾಶಿವ ಬಟಕುರ್ಕಿ, ಲಚ್ಚಪ್ಪ ಅಡವಿ, ಅತ್ತಹಳ್ಳಿ ದೇವರಾಜ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.