ADVERTISEMENT

ಕಾಮಗಾರಿ ಪೂರ್ಣಗೊಳಿಸದಿದ್ದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2017, 5:12 IST
Last Updated 20 ಅಕ್ಟೋಬರ್ 2017, 5:12 IST

ಮುಧೋಳ: ನಗರದ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ತಾಲ್ಲೂಕು ಮಟ್ಟದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಓ ವಿಕಾಸ ಸುರಳಕರ ಸ್ವಚ್ಛ ಛಭಾರತ ಮಿಷನ್ ಯೋಜನೆಯಡಿ ಆರಂಭವಾಗಿರುವ ಕಾಮಗಾರಿ ಸಕಾಲದಲ್ಲಿ ಮುಗಿಸುವುದರ ಜೊತೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದ ಅಧಿಕಾರಿಗಳ ವಿರುದ್ಧ ಶೋಕಾಸ್ ನೋಟಿಸ್ ಜಾರಿ ಮಾಡಲಾಗುವುದು ಎಂದು ಹೇಳಿದರು. ಗ್ರಾಮ ಪಂಚಾಯ್ತಿ ಸದಸ್ಯರು ಮನೆಯಲ್ಲಿಯೂ ಶೌಚಾಲಯ ನಿರ್ಮಿಸಬೇಕು. ವೈದ್ಯರು ತಾವು ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮಗಳಲ್ಲಿ ಗರ್ಭಿಣಿಯರು, ಬಾಣಂತಿಯರು ಇರುವ ಮನೆಗಳ ಮುಖ್ಯಸ್ಥರನ್ನು ಶೌಚಾಲಯ ಕಟ್ಟಿಸಿಕೊಳ್ಳಲು ಪ್ರೇರಣೆ ನೀಡಿ ಎಂದರು.ಈ ಕುರಿತು  ತಾಲ್ಲೂಕು ವೆದ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ಅವರನ್ನು ತರಾಟೆಗೆ ತಗೆದುಕೊಂಡರು.

ಕಳಪೆ ಕಾಮಗಾರಿ ಕಂಡುಬಂದರೆ ಇನ್ನೊಂದು ಏಜೆನ್ಸಿ ಮೂಲಕ ತನಿಖೆ ಮಾಡಿಸಿ ಸಂಬಂಧಿಸಿದ ಗುತ್ತಿಗೆದಾರರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು. ಸರ್ಕಾರಿ ಕಾಮಗಾರಿ ಅಡಚಣಿ ಉಂಟು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದರು. ಗ್ರಾಮಾಂತರ ಭಾಗದ ಸರ್ಕಾರಿ ಕಚೇರಿಗಳಲ್ಲಿ ಶೌಚಾಲಯ ಬಳಕೆಗೆ ಯೋಗ್ಯವಾಗಿರಬೇಕು ಎಂದು ಹೇಳಿದರು.

ADVERTISEMENT

ಅಪೌಷ್ಟಿಕತೆ, ಕಡಿಮೆ ತೂಕದ ಮಕ್ಕಳ ಪ್ರಗತಿ ಕುರಿತು ತರಬೇತಿ ನಡೆಸಲಾಗುವುದು. ಬಾಲ ವಿಕಾಸ ಸಮಿತಿಯನ್ನು ಪುನರ್‌ ರಚಿಸಿ, ಸದಸ್ಯರಿಗೆ ಕ್ಲಸ್ಟರ್ ಮಟ್ಟದಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಲಸಿಕಾ ಕಾರ್ಯಕ್ರಮ ಪರಿಶೀಲನೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಗತಿ, ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ, ವಿಕ್ಟರ್‌ ಬಾರ್ನ್‌ ರೋಗಗಳ ಕುರಿತು ತಾಲ್ಲೂಕು ಆರೋಗ್ಯಾಧಿಕಾರಿಗಳಿಂದ ಮಾಹಿತಿ ಪಡೆದರು.

ಮುಧೋಳದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೌಲಭ್ಯಗಳ ಕುರಿತು ಹಲವು ದೂರು ಬರುತ್ತಿವೆ. ಉದ್ಘಾಟನೆಗೆ ಸಜ್ಜಾಗಿ ನಿಂತ 100 ಹಾಸಿಗೆ ಆಸ್ಪತ್ರೆಯನ್ನು ಇದೇ 21 ರಂದು ಉದ್ಘಾಟನೆ ನಡೆಸಬೇಕು. ಶಿಷ್ಟಾಚಾರದ ಪ್ರಕಾರ ಆಮಂತ್ರಣ ಪತ್ರಿಕೆ ಮುದ್ರಿಸಿಬೇಕು ಎಂದು ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಜಿಲ್ಲಾ ಪಂಚಾಯ್ತಿ ಸದಸ್ಯ ಭೀಮನಗೌಡ ಪಾಟೀಲ, ತಾಲ್ಲೂಕು ಪಂಚಾಯ್ತಿ ಇಒ ಬಿ.ವಿ.ಅಡವಿಮಠ, ತಾಲ್ಲೂಕು ಪಂಚಾಯ್ತಿ ಸಹಾಯಕ ನಿರ್ದೇಶಕ ಭೀಮಪ್ಪ ತಳವಾರ, ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮಲಘಾಣ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.