ADVERTISEMENT

ಕುಡಿಯುವ ನೀರು ಯೋಜನೆ ಪೂರ್ಣಗೊಳಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2011, 9:05 IST
Last Updated 18 ಜೂನ್ 2011, 9:05 IST

ಬಾಗಲಕೋಟೆ: ಜಿಲ್ಲೆಯಲ್ಲಿ ವಿವಿಧ ಯೋಜನೆಯಡಿ ಕೈಗೊಂಡ ಕುಡಿಯುವ ನೀರಿನ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಲು ಜಿಲ್ಲಾ ಪಂಚಾಯಿತಿ ಸಾಮಾನ್ಯಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಜಿ.ಪಂ. ಅಧ್ಯಕ್ಷೆ ಕವಿತಾ ದಡ್ಡೇನವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಾಮಾನ್ಯಸಭೆಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ಉಳಿದ ಕಾಮಗಾರಿಗಳ ಪೂರ್ಣಗೊಳಿಸಲು ಸೂಚಿಸಲಾಯಿತು. 

ಅಂಗನವಾಡಿ, ಶಾಲಾ ಕಟ್ಟಡಗಳ ನಿರ್ಮಾಣಕ್ಕೆ ನಿವೇಶನದ ತೊಂದರೆ ಇದ್ದಲ್ಲಿ ಮಂಜೂರಾದ ಹಣವನ್ನು ಹಿಂತಿರುಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಸ್ಥಳೀಯವಾಗಿ ಸಂಬಂಧಿಸಿದ ಅಧಿಕಾರಿಗಳು ಚರ್ಚಿಸಿ ಸ್ಥಳೀಯರ ಮನ ಒಲಿಸಿ ನಿವೇಶನ ಪಡೆದುಕೊಳ್ಳುವಂತೆ ತಿಳಿಸಿದರು.

ಸುವರ್ಣ ಗ್ರಾಮ ಯೋಜನೆಯಡಿ ಕೈಗೊಂಡ ಕಾಮಗಾರಿ ಕಳಪೆಗುಣಮಟ್ಟದಾಗಿದ್ದು ಅದನ್ನು ಪರಿಶೀಲಿಸಿ ಮೂರನೇ ವ್ಯಕ್ತಿಯಿಂದ ತಪಾಸಣೆ ನಡೆಸುವಂತೆ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಯಿತು.

ಈವರೆಗೆ ಪ್ರಾರಂಭವಾದ ಅಂಗನವಾಡಿ ಮತ್ತು ಶಾಲಾ ಕಟ್ಟಡ ಕಾಮಗಾರಿಗಳನ್ನು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದಿಂದ ಹಿಂದೆ ಪಡೆಯಲು ಸಭೆಯಲ್ಲಿ ನಿರ್ಣಯಿಸಲಾಯಿತು. ಅಧಿಕಾರಿಗಳು ಕೈಗೊಳ್ಳುವ ಕಾಮಗಾರಿ ಮತ್ತು ಯೋಜನೆಯ ಮಾಹಿತಿಯನ್ನು ಎಲ್ಲಾ ಸದಸ್ಯರಿಗೆ ನೀಡುವಂತೆ ಸೂಚಿಸಲಾಯಿತು. 

ತೆಗ್ಗಿ ಗ್ರಾಮದ ಶಾಲೆ ಬಳಿ ಇರುವ ತೆರೆದ ಬಾವಿಗೆ ಸುತ್ತ ಆವರಣ ಗೋಡೆ, ಗುಡೂರ ಶಾಲೆಯ ಮೇಲ್ಛಾವಣಿ ರಿಪೇರಿ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಬಿಸಿಯೂಟ ಶೀಘ್ರ ಪ್ರಾರಂಭ ಮಾಡಲು ಸೂಚಿಸಲಾಯಿತು.

ವಿದ್ಯುತ್ ವಿತರಕಗಳು ಹಾಳಾಗಿದ್ದು ರೈತರ ಪಂಪ್‌ಸೆಟ್‌ಗಳಿಗೆ ಪೂರೈಕೆಯಾಗುವ ವಿದ್ಯುತ್ ಕೊರತೆಯಾಗದಂತೆ ಶೀಘ್ರ ಸೂಕ್ತ ಕ್ರಮಕೈಗೊಳ್ಳಲು ಮತ್ತು ವಿದ್ಯುತ್ ವಿತರಕ ಒದಗಿಸಲು ಉನ್ನತಾಧಿಕಾರಿಗಳಿಗೆ ಮನವಿ ಮಾಡಲು ತೀರ್ಮಾನಿಸಲಾಯಿತು.

ಸಂಸದರ ನೇತೃತ್ವದಲ್ಲಿ ರಚಿಸಲಾಗಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಸಮನ್ವಯ ಸಮಿತಿಯ ಸಭೆಯನ್ನು ಸಂಸದರ ಗಮನಕ್ಕೆ ತಂದು ಕೂಡಲೇ ಕರೆಯಲು ತೀರ್ಮಾನಿಸಲಾಯಿತು. ಮಲೇರಿಯಾ ಕಂಡು ಬರುವ ಪ್ರದೇಶಗಳಲ್ಲಿ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಬಾದಾಮಿ ತಾಲ್ಲೂಕಿನಲ್ಲಿ ಪರಿಶಿಷ್ಟ ಜನಾಂದ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿಲ್ಲದೇ ಇರುವುದರಿಂದ ನಗರ ಪ್ರದೇಶದ ವಿದ್ಯಾರ್ಥಿಗಳು ಸಮೀಪದ ಹಳ್ಳಿಗಳ ವಿದ್ಯಾರ್ಥಿನಿಲಯದಲ್ಲಿ ಅವಕಾಶ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು.

ಹೆಚ್ಚಿನ ಬೇಡಿಕೆ ಇರುವ ಕಡೆ ಅಂಗನವಾಡಿಯನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲು ಸೂಚಿಸಲಾಯಿತು. ಎಲ್ಲ ಅಧಿಕಾರಿಗಳು ಸರ್ಕಾರದ ಯೋಜನೆ ಮತ್ತು ಮಾರ್ಗ ಸೂಚಿಯನ್ನು ಸದಸ್ಯರಿಗೆ ಒದಗಿಸಲು ಅಧ್ಯಕ್ಷರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.