ADVERTISEMENT

ಕೋರಿಕೆ ವರ್ಗಾವಣೆ, ಮನವಿ ಪರಿಗಣಿಸಿ: ಕೋಟಕ್ ಮಹೀಂದ್ರಾ ಬ್ಯಾಂಕ್ ನೌಕರರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2018, 12:51 IST
Last Updated 13 ಅಕ್ಟೋಬರ್ 2018, 12:51 IST
ಬಾಗಲಕೋಟೆಯಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್‌ ನೌಕರರ ಸಂಘಟನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.
ಬಾಗಲಕೋಟೆಯಲ್ಲಿ ಕೋಟಕ್ ಮಹೀಂದ್ರ ಬ್ಯಾಂಕ್‌ ನೌಕರರ ಸಂಘಟನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.   

ಬಾಗಲಕೋಟೆ: ’ಕೋರಿಕೆ ವರ್ಗಾವಣೆ ವಿಚಾರದಲ್ಲಿ ಅಧಿಕಾರಿಗಳು ನಮ್ಮ ಮನವಿಯನ್ನು ಪರಿಗಣಿಸುತ್ತಿಲ್ಲ’ ಎಂದು ಆರೋಪಿಸಿ ಇಲ್ಲಿನ ಕೋಟಕ್ ಮಹೀಂದ್ರಾ ಬ್ಯಾಂಕ್‌ ನೌಕರರ ಸಂಘಟನೆ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಇಲ್ಲಿನ ಕೋಟಕ್ ಬ್ಯಾಂಕ್‌ನ ಶಾಖೆಯ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪದಾಧಿಕಾರಿಗಳು ಅಧಿಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘಟನೆಯ ಮುಖಂಡ ಮಹಿಪತಿ ಕುಲಕರ್ಣಿ ಮಾತನಾಡಿ, ‘ಕೋರಿಕೆ ವರ್ಗಾವಣೆಗೆ ಸಿಬ್ಬಂದಿ ಹಲವು ಬಾರಿ ಮನವಿ ಸಲ್ಲಿಸಿದರೂ ಸಂಬಂಧಿಸಿದವರು ಪರಿಗಣಿಸುತ್ತಿಲ್ಲ. ಇದರಿಂದ ಕೆಲಸ ಮಾಡಲು ತೊಂದರೆಯಾಗುತ್ತಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

‘ಬ್ಯಾಂಕ್‌ನ ಸಿಬ್ಬಂದಿ ಮೇಲೆ ಅಧಿಕ ಒತ್ತಡವಿದೆ. ಅದನ್ನು ಕಡಿಮೆ ಮಾಡಲು ಅರೆಕಾಲಿನ ನೌಕರರನ್ನು ಬಳಕೆ ಮಾಡುತ್ತಿಲ್ಲ ಹಾಗೂ ಪದವೀಧರ ಸಿಬ್ಬಂದಿಗಳನ್ನು ಗುಮಾಸ್ತ ಹುದ್ದೆಗೆ ಪರಿಗಣಿಸಲಾಗುತ್ತಿಲ್ಲ ಎಂದ ಅವರು, ಕೆಲಸದ ಸಮಯದಲ್ಲಿ ಬ್ಯಾಂಕ್‌ನ ವಿವಿಧ ಉತ್ಪನ್ನಗಳ ಮಾರಾಟ ಮಾಡುವಂತೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ’ ಎಂದು ಆರೋಪಿಸಿದರು.

‘ಬ್ಯಾಂಕ್‌ನಲ್ಲಿ ದೈನಂದಿನ ಕಾರ್ಯನಿರ್ವಹಣೆಗೆ ಅಡ್ಡಿಯುಂಟುಮಾಡದಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಇಲ್ಲಿಯವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಆದಷ್ಟು ಬೇಗ ಸಮಸ್ಯೆ ಪರಿಹರಿಸಿ ಸಿಬ್ಬಂದಿ ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಿಸಬೇಕು’ ಎಂದರು.

ಸಂಘಟನೆಯ ಮುಖಂಡರಾದ ಪವನ್ ದೇಶಪಾಂಡೆ, ಆನಂದ ಕುಲಕರ್ಣಿ ಹಾಗೂ ಎಸ್.ಕೆ.ಸಂಗಮ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.