ADVERTISEMENT

‘ನಮ್ಮ ಕಾಂಗ್ರೆಸ್ ಪಕ್ಷ’ ಉದ್ಘಾಟನೆ ಡಿ.31 ರಂದು

ಕೂಡಲಸಂಗಮದಲ್ಲಿ ನಡೆಯುವ ಕಾರ್ಯಕ್ರಮಕ್ಕೆ 3ಲಕ್ಷ ಜನ ಭಾಗಿ: ವರ್ತೂರು

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2017, 5:31 IST
Last Updated 28 ಡಿಸೆಂಬರ್ 2017, 5:31 IST

ಬಾಗಲಕೋಟೆ: ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಡಿ.31ರಂದು ನಮ್ಮ ಕಾಂಗ್ರೆಸ್ ಪಕ್ಷದ ಉದ್ಘಾಟನಾ ಸಮಾರಂಭ ನಡೆಯಲಿದೆ ಎಂದು ಶಾಸಕ ವರ್ತೂರು ಪ್ರಕಾಶ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಉದ್ಘಾಟನಾ ಸಮಾ ರಂಭಕ್ಕೆ ರಾಜ್ಯದ ವಿವಿಧೆಡೆಯಿಂದ ಸುಮಾರು 3 ಲಕ್ಷ ಮಂದಿ ಆಗಮಿಸ ಲಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಹುನಗುಂದ ಹಾಗೂ ಬೀಳಗಿಯಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಸಾವಿರಾರು ಜನರು ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಹಿರಿಯ ರಾಜಕೀಯ ನಾಯಕರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಹಿಂದ ವರ್ಗದವರಿಗೆ ಅಧಿಕಾರ ನೀಡಲು ಹೊಸ ಪಕ್ಷ ಸ್ಥಾಪಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಾಲು ಎಂದುಕೊಂಡಿದ್ದೆ, ವಿಷ ಎಂದು ಈಗ ಗೊತ್ತಾಗಿದೆ. ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ಅವರು ತಮ್ಮ ಮಕ್ಕಳಿಗೆ ರಾಜಕೀಯ ಪಟ್ಟಾಭೀಷೇಕ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ ಅಹಿಂದ, ಕುರುಬ ಸಮುದಾಯದವರಿಗೆ ಸಚಿವ ಸ್ಥಾನ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಗಳನ್ನು ನೀಡಿಲ್ಲ. ಮತಬ್ಯಾಂಕ್ ರಾಜಕಾರಣ ಮಾಡುತ್ತಿರುವ ಸಿದ್ದರಾಮಯ್ಯ ಲಿಂಗಾಯತರು ಮತ್ತು ಒಕ್ಕಲಿಗರಿಗೆ ಮಣೆ ಹಾಕುತ್ತಿದ್ದು, ಅಹಿಂದ ವರ್ಗದವರನ್ನು ಕಡೆಗಣಿಸುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮಣ್ಣು ಮುಕ್ಕಿಸುತ್ತೇವೆ ಎಂದರು.

ಈಗೀನ ಕಾಂಗ್ರೆಸ್ ಪಕ್ಷ ಒರಿಜಿನಲ್ ಅಲ್ಲ. ಅದು ಜೆಡಿಎಸ್ ಹಾಗೂ ಕಾಂಗ್ರೆಸ್ ಸೇರಿರುವ ಮಿಕ್ಸ್ ಪಕ್ಷವಾಗಿದೆ. ಸಿದ್ದರಾಮಯ್ಯ ಅವರಿಗೆ ಸೆಡ್ಡು ಹೊಡೆಯಲು ಹೊಸ ಪಕ್ಷ ಸ್ಥಾಪಿಸಿಲ್ಲ. ಅಹಿಂದ ವರ್ಗ ಹಾಗೂ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರ ವಂಚಿತರಾದವರಿಗೆ ಹೆಚ್ಚಿನ ಅಧಿಕಾರ ನೀಡಲು ಪಕ್ಷ ಸ್ಥಾಪಿಸಲು ಮುಂದಾಗಲಾಗಿದೆ. ಸಮು ದಾಯದವರು ಕೂಡಾ ಪಕ್ಷ ಸಂಘಟನೆಗೆ ಬರಬಹುದಾಗಿದೆ ಎಂದರು.

ಇಂದಿನ ಸ್ಥಿತಿಯಲ್ಲಿ ಯಾವ ಪಕ್ಷ ಕೂಡಾ 90 ಸೀಟು ಗೆಲ್ಲುವ ಸ್ಥಿತಿಯಲ್ಲಿಲ್ಲ. ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಪಕ್ಷ ಉದ್ಘಾಟನೆಯಾದ ನಂತರ ನಿರ್ಧರಿಸುತ್ತೇವೆ. ಎಷ್ಟು ಸ್ಥಾನ ಗೆಲ್ಲುತ್ತೇವೆ ಎಂಬುದನ್ನು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಪ್ರಶ್ನೆ ಯೊಂದಕ್ಕೆ ಪ್ರತಿಕ್ರಿಯಿಸಿದರು.
ವೀರಣ್ಣ ಹಳೇಗೌಡರ ಸೇರಿದಂತೆ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.