ADVERTISEMENT

ಮುಂದುವರಿದ ಮರಳು ಲೂಟಿ

​ಪ್ರಜಾವಾಣಿ ವಾರ್ತೆ
Published 10 ಜುಲೈ 2013, 10:52 IST
Last Updated 10 ಜುಲೈ 2013, 10:52 IST

ಅಮೀನಗಡ: ಮಲಪ್ರಭಾ ನದಿ ತೀರದಲ್ಲಿ ಮರಳು ಗಣಿಗಾರಿಕೆ ನಿಷೇಧಿಸಲು ಜಿಲ್ಲಾಡಳಿತ ಸಜ್ಜಾಗಿರುವ ನಡುವೆಯೇ ನದಿಯ ಕಮತಗಿ ಆಸುಪಾಸಿನಲ್ಲಿ ನಿರಾತಂಕವಾಗಿ ಅಕ್ರಮ ಮರಳು ಗಣಿಗಾರಿಕೆ ಮುಂದುವರಿದಿದೆ.

ಕಮತಗಿ ಸಮೀಪ ಹೆದ್ದಾರಿ ಪಕ್ಕದಲ್ಲೇ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.

ಕಮತಗಿ ಸಮೀಪದ ದ್ಯಾಮವ್ವನ ಗುಡಿ ಹಿಂದಿನ ಪ್ರದೇಶದಲ್ಲಿ ಪ್ರತಿನಿತ್ಯ ನೂರಾರು ಲೋಡ್ ಮರಳನ್ನು ಕೂಡಿಟ್ಟು, ಹಗಲು-ರಾತ್ರಿ ಎನ್ನದೇ ಟ್ರ್ಯಾಕ್ಟರ್, ಲಾರಿಗಳ ಮೂಲಕ ಸಾಗಾಟ ಮಾಡಲಾಗುತ್ತದೆ. ಇದಲ್ಲದೇ ನದಿಯ ಪಕ್ಕದ ಹೊಲದಲ್ಲಿ ಮರಳನ್ನು ಸಂಗ್ರಹಿಸಿಟ್ಟು, ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದೆ. 

`ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡದಂತೆ ತಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗಿದೆ.

ಪ್ರತಿನಿತ್ಯ ಸ್ಥಳಕ್ಕೆ ಭೇಟಿ ನೀಡುವಂತೆ ಅಮೀನಗಡ ಪೊಲೀಸರಿಗೆ ತಿಳಿಸಲಾಗಿದೆ' ಎಂದು ತಹಶೀಲ್ದಾರ್ ಪಂಪನಗೌಡ ಮೇಲ್ಸಿಮೆ `ಪ್ರಜಾವಾಣಿ'ಗೆ ತಿಳಿಸಿದರು.

ಆದರೆ, ಯಾವೊಬ್ಬ ಪೊಲೀಸ್ ಅಧಿಕಾರಿಯೂ ಇಲ್ಲಿಗೆ ಭೇಟಿ ನೀಡಿ ಅಕ್ರಮ ಮರಳುಗಾರಿಕೆ ತಡೆಯಲು ಕ್ರಮಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.