ADVERTISEMENT

ಮುಧೋಳದಲ್ಲಿ ಬಂದ್ ಸಂಪೂರ್ಣ ಯಶಸ್ವಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2012, 19:30 IST
Last Updated 18 ಜೂನ್ 2012, 19:30 IST
ಮುಧೋಳದಲ್ಲಿ ಬಂದ್ ಸಂಪೂರ್ಣ ಯಶಸ್ವಿ
ಮುಧೋಳದಲ್ಲಿ ಬಂದ್ ಸಂಪೂರ್ಣ ಯಶಸ್ವಿ   

ಮುಧೋಳ: ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಅವರು ರೈತನ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ, ರೈತರು ಕರೆನೀಡಿದ್ದ ~ಮುಧೋಳ ಬಂದ್~ ಸೋಮವಾರ ಸಂಪೂರ್ಣ ಯಶಸ್ವಿಯಾಯಿತು.
 
ಭಾರಿ ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮಧ್ಯಾಹ್ನದವರೆಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಜನರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬಂದ್ ಬೆಂಬಲಿಸಿ,  ಪ್ರತಿಭಟನೆಯಲ್ಲೂ ಪಾಲ್ಗೊಂಡಿದ್ದರು.

ಮುಂಜಾನೆ ಸಂಗೊಳ್ಳಿ ರಾಯಣ ವೃತ್ತದಲ್ಲಿ ಸೇರಿದ ರೈತರು ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು. ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಶಿವಾಜಿ ವೃತ್ತ ಹಾಗೂ ರಾಣಾ ಪ್ರತಾಪಸಿಂಹ ವೃತ್ತದಲ್ಲಿ ರಸ್ತೆ ಮೇಲೆ ಕುಳಿತು ಘೋಷಣೆಗಳನ್ನು ಕೂಗಿದರು.

ಪ್ರತಿಭನಾಕಾರರನ್ನು ಉದ್ದೇಶಿಸಿ ರೈತ ಸಂಘದ ಮುಖಂಡ ರಮೇಶ ಗಡದಣ್ಣವರ, ಜಿ.ಪಂ. ಮಾಜಿ ಅಧ್ಯಕ್ಷ ಎಸ್.ಎಸ್. ಮಲಘಾಣ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹನುಮಂತಗೌಡ ಬಿರಾದಾರ ಪಾಟೀಲ ಮಾತನಾಡಿದರು.

ಸರ್ಕಾರದ ಧೋರಣೆಯ ವಿರುದ್ಧ, ಸಚಿವರ ವರ್ತನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ನಂತರ ತಹಶೀಲ್ದಾರ್‌ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಲು ಮಂಟೂರಿನಿಂದ ಟ್ರ್ಯಾಕ್ಸ್‌ನಲ್ಲಿ ಆಗಮಿಸುತ್ತಿದ್ದ ರೈತರನ್ನು ತಡೆದಿದ್ದಕ್ಕೆ ಪೊಲೀಸರೊಬ್ಬರ ಮೇಲೆ ರೈತರು ಹಲ್ಲೆ ನಡೆಸಿದ್ದಾರೆಂದು ಕೆಲಹೊತ್ತು ಮಾತಿನ ಚಕಮಕಿ ನಡೆದು, ಗೊಂದಲದ ವತಾವರಣ ಸೃಷ್ಟಿಯಾಗಿತ್ತು.

ಪ್ರತಿಭಟನೆಯಲ್ಲಿ ಅಪ್ಪಾಸಾಬ್ ಲಕ್ಕಂ, ಜಿ.ಪಂ. ಸದಸ್ಯ ದುಂಡಪ್ಪ ಲಿಂಗರಡ್ಡಿ, ರನ್ನ ಸಕ್ಕರೆ ಕಾರ್ಖಾನೆ ನಿರ್ದೇಶಕ ದಯಾನಂದ ಪಾಟೀಲ, ರಾಜು ಪಾಟೀಲ, ಉದಯ ಸಾರವಾಡ, ಗೋವಿಂದಪ್ಪ ಸುರಮಂಜಿ ಹಾಗೂ ರಾಜ್ಯ ರೈತ ಸಂಘ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.