ಬನಹಟ್ಟಿ: ಶಿಕ್ಷಣ ಪ್ರತಿಯೊಬ್ಬರ ಹಕ್ಕು. ಮಹಿಳೆಯರು ಕೂಡಾ ತಪ್ಪದೆ ಶಿಕ್ಷಣ ಪಡೆದು ಭಾರತದ ನಿರ್ಮಾಣದಲ್ಲಿ ಸಹಕರಿಸಬೇಕು. ಮುಖ್ಯಮಂತ್ರಿಗಳು ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ₨21ಸಾವಿರ ಕೋಟಿ ಹಣ ತೆಗೆದಿರಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದರು.
ಇತ್ತೀಚೆಗೆ, ಸಮೀಪದ ಯಲ್ಲಟ್ಟಿ ಗ್ರಾಮದಲ್ಲಿ ಜಿಲ್ಲಾ ಪಂಚಾಯಿತಿ ಬಾಗಲಕೋಟೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ವ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ಉನ್ನತೀಕರಿಸಿದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭ ನೆರವೇರಿಸಿ ಅವರು ಮಾತನಾಡಿದರು.
ಅಂದಾಜು ₨74 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಶಾಲಾ ಕಟ್ಟಡ, ಗ್ರಂಥಾಲಯ, ಪ್ರಯೋಗಾಲಯ ಹಾಗೂ ಶೌಚಾಲಯಗಳನ್ನು ಈ ಶಾಲೆ ಹೊಂದಲಿದೆ. 2014–15ನೇ ಸಾಲಿನಲ್ಲಿ ಕ್ಷೇತ್ರದಲ್ಲಿ ಒಟ್ಟು 18 ಶಾಲೆಗಳ ನಿರ್ಮಾಣಕ್ಕಾಗಿ ₨12 ಕೋಟಿ 38 ಲಕ್ಷದ ಕ್ರಿಯಾ ಯೋಜನೆಯನ್ನು ಕಳುಹಿಸಿ ಕೊಡಲಾಗಿದೆ ಎಂದರು.
ಗಂಗಾಧರ ಮೋಪಗಾರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸಾವಿತ್ರಿ ಪಾಟೀಲ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾಬಾಗೌಡ ಪಾಟೀಲ, ತಾಲ್ಲೂಕು ಪಂಚಾಯಿತಿ ಸದಸ್ಯ ಮುತ್ತುರಾಜ ಶಿರಹಟ್ಟಿ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.