ಬಾದಾಮಿ (ಬಾಗಲಕೋಟೆ ಜಿಲ್ಲೆ): ಎರಡು ದಿನಗಳ ಹಿಂದೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ತಾಲ್ಲೂಕಿನ ನಂದಿಕೇಶ್ವರ ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಪ್ರಭಾವತಿ ಹಂಗರಗಿ (52) ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬಾಗಲಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬಾದಾಮಿ ಪಟ್ಟಣದ ನಿವಾಸಿಯಾದ ಪ್ರಭಾವತಿ ಮೇ 18ರಂದು ಬೆಳಿಗ್ಗೆ ಕೋವಿಡ್–19 ಕರ್ತವ್ಯಕ್ಕೆ ಹಾಜರಾಗಲು ತಾಲ್ಲೂಕಿನ ನಂದಿಕೇಶ್ವರಕ್ಕೆ ಪರಿಚಿತರೊಂದಿಗೆ ಬೈಕ್ನಲ್ಲಿ ಹೊರಟಿದ್ದರು. ಈ ವೇಳೆ ಸಮೀಪದ ಕೋಣಮ್ಮ ದೇವಾಲಯದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡಿದ್ದ ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಲಾಕ್ಡೌನ್ ಕಾರಣ ನಂದಿಕೇಶ್ವರ ಗ್ರಾಮಕ್ಕೆ ಬಸ್ ಸೌಕರ್ಯ ಇಲ್ಲದ ಕಾರಣ ಪ್ರಭಾವತಿ ಬೈಕ್ನಲ್ಲಿ ತೆರಳುತ್ತಿದ್ದರು. ಅತಿವೇಗದ ನಿರ್ಲಕ್ಷ್ಯದ ಚಾಲನೆ ಆರೋಪದ ಮೇಲೆ ದ್ವಿಚಕ್ರ ವಾಹನ ಸವಾರನ ವಿರುದ್ಧ ಬಾದಾಮಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.