ಬಾಗಲಕೋಟೆ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ತರಲೇಬೇಕು ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ವಿಚಾರದಲ್ಲಿ ರಾಜ್ಯ ಸರ್ಕಾರ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲೇಬೇಕು. ಜೊತೆಗೆ ಮತಾಂತರಕ್ಕೆ ಕಾರಣವಾದ ಸಾಮಾಜಿಕ, ಆರ್ಥಿಕ ಸಂಗತಿಗಳ ಬಗ್ಗೆ ಅಧ್ಯಯನ ನಡೆಸಿ ಅವುಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ರಾಜ್ಯದಲ್ಲಿ ಎಲ್ಲ ಜಾತಿ ವರ್ಗದ ಜನರನ್ನು ಅವರ ಬಡತನ, ಆರೋಗ್ಯ ಸ್ಥಿತಿಯನ್ನು ಮುಂದಿಟ್ಟುಕೊಂಡು ದೊಡ್ಡ ಪ್ರಮಾಣದಲ್ಲಿ ಮತಾಂತರಗೊಳಿಸುವ ಕೆಲಸ ನಡೆಯುತ್ತಿದೆ. ಇದರ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚನೆ ಮಾಡಬೇಕು. ನಮ್ಮ ಬಡತನ, ನಮ್ಮ ಅಸಹಾಯಕತೆಯನ್ನು ದುರುಪಯೋಗ ಪಡಿಸಿಕೊಳ್ಳಲು ಯಾರಿಗೂ ಅವಕಾಶ ಕೊಡಬಾರದು ಎಂದರು.
ಮತಾಂತರ ನಿಷೇಧ ಕಾಯ್ದೆಗೆ ಕಾಂಗ್ರೆಸ್ ಪಕ್ಷ ವಿರೋಧ ಮಾಡುತ್ತಿರುವುದು ಅವರ ಮಾನಸಿಕತೆಯನ್ನು ಪ್ರತಿಧ್ವನಿಸುತ್ತದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಸಿಡಿಎಸ್ ಬಿಪಿನ್ ರಾವತ್ ಅವರ ಸಾವಿಗೆ ಕೆಲವು ವಿಕೃತ ಮನಸ್ಸುಗಳು ಸಂಭ್ರಮಿಸುತ್ತಿವೆ. ಅವರು ವಿಕೃತ ಮನಸ್ಸಿನವರು ಮಾತ್ರವಲ್ಲ. ದೇಶದ್ರೋಹಿಗಳು ಕೂಡ ಹೌದು. ಕೇಂದ್ರದ ಗೃಹ ಇಲಾಖೆ ಹಾಗೂ ಅಯಾ ರಾಜ್ಯ ಸರ್ಕಾರಗಳು ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶೋಭಾ ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.